ಬೆಂಗಳೂರು: ಶಾಸಕ ವಿಜಯಕುಮಾರ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆ ಬಿದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ.
ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಆಯೋಗದ ಸೂಚನೆ ಮೇರೆಗೆ ಅಭ್ಯರ್ಥಿಗಳನ್ನು ಹೊರತುಪಡಿಸಿ ನಾಯಕರು ಹೊರ ನಡೆದಿದ್ದಾರೆ. ಇಂದು ಅಭ್ಯರ್ಥಿಗಳು ಮನೆ ಮನೆಗಳಿಗೆ ತೆರಳಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಕ್ಷೇತ್ರಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ಜೂ. 13 ರಂದು ಮತ ಎಣಿಕೆ ನಡೆಯಲಿದೆ.
ಜಯನಗರ ಕ್ಷೇತ್ರದ ಬಿಜೆಪಿ ಉಸ್ತುವಾರಿ ವಹಿಸಿರುವ ಕೇಂದ್ರ ಸಚಿವ ಅನಂತ್ ಕುಮಾರ್, ನಿನ್ನೆ ಬೈಕ್ Rally ನಡೆಸಿ, ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದರು. ಎಲ್ಲಾ ಬಿಜೆಪಿ ಪಾಲಿಕೆ ಸದಸ್ಯರು ಇದರಲ್ಲಿ ಪಾಲ್ಗೊಂಡು ಪ್ರಚಾರ ನಡೆಸಿದರು. ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ತನ್ನ ಮಗಳು ಸೌಮ್ಯರೆಡ್ಡಿ ಪರವಾಗಿ ರಾಮಲಿಂಗಾರೆಡ್ಡಿ ರೋಡ್ ಶೋ ನಡೆಸಿ ಪ್ರಚಾರ ನಡೆಸಿದರು.
ಜಯನಗರ ಕ್ಷೇತ್ರ ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸಚಿವ ಖಾತೆ ತಪ್ಪಿದ ನಂತರ ರಾಮಲಿಂಗಾರೆಡ್ಡಿ ತನ್ನ ಮಗಳನ್ನು ಗೆಲ್ಲಿಸಲು ಇನ್ನಿಲ್ಲದಂತಹ ಕಸರತ್ತು ನಡೆಸುತ್ತಿದ್ದಾರೆ. ಬಿಟಿಎಂ ಕ್ಷೇತ್ರದ ಚುನಾವಣೆಯಲ್ಲಿ ರಾಮಲಿಂಗಾರೆಡ್ಡಿ ಪ್ರಚಾರಕ್ಕೆ ಹೋಗಿರಲಿಲ್ಲ. ಆದರೆ, ಸೌಮ್ಯರೆಡ್ಡಿ ಪರವಾಗಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಸೌಮ್ಯರೆಡ್ಡಿ ಗೆಲುವಿಗಾಗಿ ಸಾಕಷ್ಟು ಶ್ರಮಪಡುತ್ತಿದ್ದು, ಶೇ, 100 ರಷ್ಟು ಗೆಲ್ಲುವ ವಿಶ್ವಾಸವಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರಸಚಿವರಾದ ಅನಂತ್ ಕುಮಾರ್, ಡಿ. ವಿ, ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮುಖಂಡರು ಪಕ್ಷದ ಅಭ್ಯರ್ಥಿ ಪ್ರಹ್ಲಾದ್ ಪರವಾಗಿ ಪ್ರಚಾರ ನಡೆಸಿದ್ದಾರೆ. ರವಿಶಂಕರ್ ರೆಡ್ಡಿ ಕೂಡಾ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.