ರಾಜಕೀಯ

ವಿಧಾನಪರಿಷತ್ ಚುನಾವಣೆ: ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು

Sumana Upadhyaya

ಬೆಂಗಳೂರು: ವಿಧಾನ ಪರಿಷತ್ತಿನ ಆರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ 2 ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.

ಬೆಂಗಳೂರು ಪದವೀಧರ ಆಗ್ನೇಯ ಶಿಕ್ಷಕರ, ನೈರುತ್ಯ ಪದವೀಧರ ಕ್ಷೇತ್ರಗಳು ಬಿಜೆಪಿ ಪಾಲಾದರೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನ ಮರಿತಿಬ್ಬೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನ ಎಸ್.ಎಲ್.ಬೋಜೇಗೌಡ, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಬಿಜೆಪಿ ಅ.ದೇವೇಗೌಡ ಹಾಗೂ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಚಂದ್ರಶೇಖರ್ ಪಾಟೀಲ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಂವೈ ನಾರಾಯಣಸ್ವಾಮಿ ವಿಧಾನಪರಿಷತ್ ಸದಸ್ಯರಾಗಿ ಮತ್ತು ಜೆಡಿಎಸ್ ಅಭ್ಯರ್ಥಿ ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರು ಆಯ್ಕೆಯಾಗಿದ್ದಾರೆ.

ಮೂರು ಪದವೀಧರ ಕ್ಷೇತ್ರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ರಾಜ್ಯ ವಿಧಾನಪರಿಷತ್ ಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಕಳೆದ ಶುಕ್ರವಾರ ನಡೆಯಿತು. ಈಗಿನ ಸದಸ್ಯರು ಇದೇ ತಿಂಗಳ 21ಕ್ಕೆ ನಿವೃತ್ತರಾಗಲಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನಪರಿಷತ್ ಸಭಾಪತಿ ಡಿ ಎಚ್ ಶಂಕರಮೂರ್ತಿ, ರಮೇಶ್ ಬಾಬು, ಮರಿತಿಬ್ಬೇ ಗೌಡ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಮಚಂದ್ರ ಗೌಡ ಮತ್ತು ಅಮರನಾಥ್ ಪಾಟೀಲ್ ಅವರು ನಿವೃತ್ತಿ ಹೊಂದಲಿದ್ದಾರೆ. ಮೂವರು ವಿಧಾನಪರಿಷತ್ ಸದಸ್ಯರು ಸೇರಿದಂತೆ 75 ಅಭ್ಯರ್ಥಿಗಳು 6 ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು.

75 ಸದಸ್ಯರ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ 34, ಬಿಜೆಪಿ 20 ಮತ್ತು ಜೆಡಿಎಸ್ 14 ಸದಸ್ಯರನ್ನು ಒಳಗೊಂಡಿದೆ. ಮೂವರು ಸ್ವತಂತ್ರ ಪಕ್ಷಗಳ ಸದಸ್ಯರಿದ್ದು ಇನ್ನು ನಾಲ್ಕು ಸ್ಥಾನಗಳು ಖಾಲಿಯಿವೆ.

SCROLL FOR NEXT