ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಎಲ್ಲರನ್ನೂ ಹುಬ್ಬೇರಿಸುವಂತಹ ವಿದ್ಯಮಾನ ನಡೆದಿದ್ದು, ಕಾಂಗ್ರೆಸ್ ಶಾಸಕ ಸಿ ಎಸ್ ಶಿವಳ್ಳಿ ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಮೊನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸಭೆ ನಡೆಸಿ ಭಿನ್ನಮತೀಯ ಶಾಸಕರು ಅನಧಿಕೃತ ಸಭೆಗಳನ್ನು ನಡೆಸಿ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ತಿಳಿಸದಂತೆ ಎಚ್ಚರಿಕೆ ನೀಡಿದ್ದ ಒಂದು ದಿನದ ನಂತರ ಶಾಸಕ ಶಿವಳ್ಳಿ ಭೇಟಿ ನೀಡಿದ್ದಾರೆ.
ತಮ್ಮ ಕ್ಷೇತ್ರದಲ್ಲಿನ ಅಭಿವೃದ್ಧಿಪರ ಕೆಲಸಗಳ ಕುರಿತು ಚರ್ಚೆ ನಡೆಸಲು ಸಭೆ ಕರೆದಿರುವುದಾಗಿ ಶಾಸಕ ಶಿವಳ್ಳಿ ಸ್ಪಷ್ಟನೆ ನೀಡಿದರೂ ಕೂಡ ಕಾಂಗ್ರೆಸ್ ನ ಕೆಲವು ಶಾಸಕರಲ್ಲಿ ಭಿನ್ನಮತ ಏರ್ಪಟ್ಟಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಲ ದಿನಗಳ ಹಿಂದೆ ಮಾಜಿ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿರುವುದು ಮತ್ತು ಪಕ್ಷದ ಹೈಕಮಾಂಡ್ ಮಧ್ಯ ಪ್ರವೇಶ ಹಲವರಲ್ಲಿ ಅಚ್ಚರಿಯನ್ನುಂಟುಮಾಡಿದೆ. ಭಿನ್ನಮತೀಯ ಶಾಸಕರನ್ನು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಂಪರ್ಕಿಸುವಲ್ಲಿ ಕುಮಾರಸ್ವಾಮಿ ಪಾತ್ರವಿದೆಯೇ ಎಂಬ ಸಂಶಯ ಉಂಟಾಗಿದೆ.
ನನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲು ನಾನು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಿವಳ್ಳಿ ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಭೇಟಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಮುಜುಗರವನ್ನುಂಟುಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಆದರೆ ಕಾಂಗ್ರೆಸ್ ಪದಾಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚರ್ಚಿಸುವ ಹಲವು ವಿಷಯಗಳಿರುತ್ತವೆ. ಅದು ಸಚಿವ ಹುದ್ದೆಗೆ ಬೇಡಿಕೆಯಿಡುವುದು ಆಗಬೇಕೆಂದೇನಿಲ್ಲ ಎಂದಿದ್ದಾರೆ.
ಆದರೆ ಕಾಂಗ್ರೆಸ್ ನಾಯಕ ಡಾ ಜಿ ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾದರೂ ಕೂಡ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದೇಕೆ ಎಂಬುದು ಹಲವರ ಪ್ರಶ್ನೆಯಾಗಿದೆ. ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಯಲ್ಲಿ ನೀತಿ ಆಯೋಗದ ಸಭೆಯಲ್ಲಿ ಇಂದು ಭಾಗವಹಿಸಲಿದ್ದು ಈ ಸಂದರ್ಭದಲ್ಲಿಯೇ ಶಾಸಕ ಶಿವಳ್ಳಿ ಭೇಟಿ ಮಹತ್ವ ಪಡೆದಿದೆ.