ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸುತ್ತೇವೆ ಎಂದಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಉಲ್ಟಾ ಹೊಡೆದಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಬಗ್ಗೆ ಶನಿವಾರ ಸುಳಿವು ನೀಡಿದ್ದಾರೆ.
ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಕುರಿತು ಇಂದು ಮೈಸೂರಿನಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಟಿಕೆಟ್ ಬೇಕು ಅಂತ ಅಪೇಕ್ಷ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಇನ್ನು ಅಭ್ಯರ್ಥಿ ಫೈನಲ್ ಆಗಿಲ್ಲ. ಹಾಗಾಗಿ ಅವರು ಟಿಕೆಟ್ ಕೇಳುತ್ತಿದ್ದಾರೆ. ಆ ಬಗ್ಗೆ ಪಕ್ಷದ ಒಳಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅವರಿಗೆ ಗೆಲ್ಲುವ ಸಾಮರ್ಥ್ಯವಿದ್ದರೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಇಷ್ಟು ದಿನ ತಮ್ಮ ಕುಟುಂಬದಿಂದ ತಾವು ಮತ್ತು ರೇವಣ್ಣ ಇಬ್ಬರೇ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದು ಹೇಳುತ್ತಿದ್ದ ಕುಮಾರಸ್ವಾಮಿ ಇಂದು ಪ್ರಜ್ವಲ್ ರೇವಣ್ಣ ಟಿಕೆಟ್ ವಿಚಾರದಲ್ಲಿ ಕಾಲ ನಿರ್ಧಾರ ಮಾಡಲಿದೆ ಎಂದು ಹೇಳುವ ಮೂಲಕ ಪ್ರಜ್ವಲ್ ಸ್ಪರ್ಧೆಯ ಬಗ್ಗೆ ಸುಳಿವು ನೀಡಿದ್ದಾರೆ.