ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್
ಬೆಂಗಳೂರು: ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ.
ರವಿಕುಮಾರ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆ ಜನರಿಗೆ ಖಾದರ್ ಹಾಗೂ ರಮಾನಾಥ ರೈ ಬಗ್ಗೆ ತಿಳಿದಿದೆ. ಮೂರ್ಖರಂತೆ ಮಾತನಾಡಿರುವ ಬಿಜೆಪಿ ನಾಯಕರಿಂದ ಅವರಿಗೆ ನಮ್ಮ ಬಗ್ಗೆ ಪ್ರಮಾಣಪತ್ರಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೆಲವರಿಗೆ ರೋಗ ಬಂದಂತಾಗುತ್ತದೆ. ಹೀಗಾಗಿಯೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಗಳಿಗೆ ತಲೆ ಸರಿಯಿಲ್ಲ. ಹೀಗಾಗಿ ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡುವ ಅಗತ್ಯವೂ ಇಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡುವ ಸಲುವಾಗಿ ಬಿಜೆಪಿ ಪ್ರತ್ಯೇಕತಾವಾದಿಗಳೊಂದಿಗೆ ಕೈ ಜೋಡಿಸಿದೆ. ಅಧಿಕಾರಕ್ಕೆ ಬರಲು ಬಿಜೆಪಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ಇದಕ್ಕೆ ಉತ್ತರ ನೀಡಬೇಕಿದೆ ಎಂದಿದ್ದಾರೆ.
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹೀಗಾಗಿ ಅವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಶಾಂತಿ ಹಾಗೂ ಒಗ್ಗಟ್ಟಿನ ಹಿತದೃಷ್ಟಿಯಿಂದಾದರೂ ಬಿಜೆಪಿಯವರು ಇಂತಹ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos