ಬೆಂಗಳೂರು; ಜೆಡಿಎಸ್ ಜೊತೆ ಮಾಡಿಕೊಂಡಾದರೂ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿರುವ ನಡುವಲ್ಲೇ, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಶಾಸಕರು ನಾಪತ್ತೆಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಶಾಸಕಾಂಗ ಸಭೆಗೆ 78 ಶಾಸಕರ ಪೈಕಿ ಕೇವಲ 66 ಶಾಸಕರು ಮಾತ್ರ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಮುಖದಲ್ಲಿ ಆತಂಕ ಮನೆ ಮಾಡಿದೆ.
ಸಭೆಗೆ ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬೀದರ್ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಈಶ್ವರ್ ಖಂಡ್ರೆ ಹಾಗೂ ಇತರೆ ಕಾಂಗ್ರೆಸ್ ಶಾಸಕರು ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ಶಾಸಕರಾದ ಅಮರೇಗೌಡ ನಾಯಕ ಹಾಗೂ ಭೀಮನಾಯ್ಕ್ ಅವರು ನಾಪತ್ತೆಯಾಗಿದ್ದು, ಸಂಪರ್ಕಿಸಲು ಎಷ್ಟೇ ಪ್ರಯತ್ನ ನಡೆಸಿದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಇದರಂತೆ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿರುವ ಶಾಸಗ ನಾಗೇಂದ್ರ ಹಾಗೂ ಆನಂದ್ ಸಿಂಗ್ ಅವರೂ ಕೂಡ ಕಾಂಗ್ರೆಸ್'ಗೆ ಕೈ ಕೊಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಈ ನಡುವೆ ಜೆಡಿಎಸ್ ಇಬ್ಬರು ಶಾಸಕರಾದ ರಾಜಾ ವೆಂಕಟಪ್ಪನಾಯಕ ಮತ್ತು ವೆಂಕಟ ರಾವ್ ನಾಡಗೌಡ ಅವರೂ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷ ಸಭೆ ನಡೆಯುತ್ತಿದ್ದು, ಸಭೆಗೆ ಇಬ್ಬರೂ ನಾಯಕರೂ ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ.