ರಾಜಕೀಯ

ಎಚ್ ಡಿಕೆ ಪ್ರಮಾಣ ವಚನಕ್ಕೆ ಸಿದ್ಧತೆ: ಶಾಸಕರಿಂದ ಮಂತ್ರಿಗಿರಿ ಲಾಬಿ ಆರಂಭ

Srinivasamurthy VN
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಸರ್ಕಾರದಲ್ಲಿ ಮಂತ್ರಿಗಿರಿಗೂ ದೊಡ್ಡ ಲಾಬಿ ಆರಂಭವಾಗಿದೆ.
ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಮ್ಮ ತಮ್ಮ ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅಲ್ಲದೆ ತಮ್ಮ ಜಿಲ್ಲೆಯ ಶಾಸಕರಿಗೆ ಮಂತ್ರಿಗಿರಿ ನೀಡುವಂತೆ ಮತ್ತು ತಮ್ಮ ಜಿಲ್ಲೆಗೆ ಉಸ್ತುವಾರಿ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ ಮಾಡುತ್ತಿದ್ದಾರೆ. ಇದಕ್ಕೆ ಇಂಬು ನೀಡುವಂತೆ ರಾಯಚೂರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಮುಖಂಡರು ಆಗ್ರಹಿಸಿದ್ದು, ಈ ಸಂಬಂಧ ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷ ಎಚ್​ಡಿ ದೇವೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಇಬ್ಬರು ಶಾಸಕರಿದ್ದು, ಇಬ್ಬರ ಪೈಕಿ ಹಿರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್, ಬಿಜೆಪಿ ಎರಡು ಅವಧಿಯಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡಿಲ್ಲ. ಹೀಗಾಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದೆ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಜೆಡಿಎಸ್ ಸರ್ಕಾರದಲ್ಲಿ ನಮ್ಮ ಜಿಲ್ಲೆಗೆ ಪ್ರಾತಿನಿಧ್ಯ ಸಿಗಬೇಕು. ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡಗೆ ಸಚಿವ ಸ್ಥಾನ ನೀಡಬೇಕು. ನಮ್ಮ ಜಿಲ್ಲೆಯಿಂದ ಇಬ್ಬರು ಶಾಸಕರನ್ನು ಆಯ್ಕೆ ಮಾಡಿದ್ದೇವೆ. ಅದರಲ್ಲಿ ನಾಡಗೌಡ ಹಿರಿಯರು ಅವರಿಗೆ ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ದೇವೇಗೌಡರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಎಂದು ಆಗ್ರಹಿಸಿದ್ದಾರೆ.
SCROLL FOR NEXT