ಬಾಗಲಕೋಟೆ: ನನ್ನ ತಂದೆಯಂತೆಯೇ ನಾನು ಸಹ ಬ್ರಾಹ್ಮಣ ವ್ಯಕ್ತಿಯನ್ನು ಸೋಲಿಸಿ ಮೊದಲ ಬಾರಿಗೆ ಶಾಸಕನಾಗಿದ್ದೇನೆ ಎಂದು ನೂತನ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ ಅವರು ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಜಮಖಂಡಿಯಲ್ಲಿ ಅಲ್ಪಸಂಖ್ಯಾತ ಸಮಾಜದಿಂದ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಆನಂದ್ ನ್ಯಾಮಗೌಡ, 1990ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಅವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿದ್ದರು. ಅದು ಇಡೀ ದೇಶದ ಗಮನ ಸೆಳೆದಿತ್ತು. ಈಗ ನಾನೂ ಅದೇ ಬ್ರಾಹ್ಮಣರ ವಿರುದ್ಧ 40 ಸಾವಿರ ಮತಗಳ ಅಂತರದಲ್ಲಿ ಗೆದ್ದು ರಾಜ್ಯದ ಗಮನ ಸೆಳೆದಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಆನಂದ ನ್ಯಾಮಗೌಡ, ಬ್ರಾಹ್ಮಣ ಸಮುದಾಯದವರು ಶಾಸಕರ ಹೇಳಿಕೆಯನ್ನು ಖಂಡಿಸಿದ್ದರು. ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಶ್ರೀಕಾಂತ್ ಕುಲಕರ್ಣಿ ಅವರು ಸಹ ಹೇಳಿಕೆಯನ್ನು ಖಂಡಿಸಿ ಆನಂದ್ ನ್ಯಾಮಗೌಡ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು
ಈ ಬಗ್ಗೆ ಸ್ಪಷ್ಟನೆ ನೀಡಿರುವ ಆನಂದ್ ನ್ಯಾಮಗೌಡ, 'ಕಾರ್ಯಕ್ರಮದಲ್ಲಿ ನನಗಿಂತ ಮೊದಲು ಒಬ್ಬರು ಭಾಷಣ ಮಾಡಿದ್ದರು. ಅವರು ನನ್ನ ತಂದೆ ಗೆಲುವಿನ ಬಗ್ಗೆ ಮಾತನಾಡಿದರು. ಅವರ ಮಾತನ್ನು ನಾನು ಸ್ಪಷ್ಟಪಡಿಸಿದ್ದೇನೆ ಅಷ್ಟೇ' ಎಂದಿದ್ದಾರೆ.
ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಮಾತಿನಿಂದ ಸಮುದಾಯಕ್ಕೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆನಂದ ನ್ಯಾಮಗೌಡ ಅವರು ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಅವರ ವಿರುದ್ಧ ಗೆದ್ದಿದ್ದರು. ತಂದೆಯ ನಿಧನದ ಅನುಕಂಪದಲ್ಲಿ ಅವರು ಗೆಲುವು ಸಾಧಿಸಿದ್ದರು. ಆದರೆ, ಈಗ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬ್ರಾಹ್ಮಣ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos