ರಾಜಕೀಯ

ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದಿಂದ ರೆಡ್ಡಿ, ಪ್ರಿಯಾ ಕೃಷ್ಣ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

Nagaraja AB

ಬೆಂಗಳೂರು: 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹುಡುಕಾಟ ಪ್ರಕ್ರಿಯೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿ ಪಕ್ಷದ ಭದ್ರಕೋಟೆಯಾಗಿದ್ದು, ಈ ಕ್ಷೇತ್ರದಿಂದಲೇ ಅನಂತ ಕುಮಾರ್  ಸತತವಾಗಿ ಆರು ಬಾರಿಗೆ ಲೋಕಸಭೆಗೆ ಚುನಾಯಿತರಾಗಿದ್ದರು. ಅನಂತ ಕುಮಾರ್ ನಿಧನದ ನಂತರ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು  ಮುಂದಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ಇದೆ.

ಈ ಕ್ಷೇತ್ರದ ಸಂಬಂಧ ಕೆಲ ದಿನಗಳ ಹಿಂದೆ ಎಐಸಿಸಿ  ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ನಡೆಸಿದ ಸಭೆಯಲ್ಲಿ ರಾಮಲಿಂಗಾರೆಡ್ಡಿ, ಪ್ರಿಯಾಕೃಷ್ಣ ಹೆಸರು ಕೇಳಿಬಂದಿದೆ. ಆದಾಗ್ಯೂ, ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಪ್ರಿಯಾ ಕೃಷ್ಣ ವಿಧಾನಸಭಾ ಚುನಾವಣೆಯಲ್ಲಿ ಗೋವಿಂದ ರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ. ಪ್ರಿಯಾ ಕೃಷ್ಣ ತಂದೆ ಎಂ. ಕೃಷ್ಣಪ್ಪ ವಿಜಯನಗರದ ಶಾಸಕರಾಗಿದ್ದಾರೆ. ಈ ಮೂರು ಕ್ಷೇತ್ರಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಬರಲಿವೆ.

ರಾಮಲಿಂಗಾರೆಡ್ಡಿಗೆ ಲೋಕಸಭಾ ಚುನಾವಣೆಯಲ್ಲಿ ಆಸಕ್ತಿ ಇದ್ದಂತಿಲ್ಲ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಮಲಿಂಗಾರೆಡ್ಡಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗೃಹ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದರು. ಬಿಜೆಪಿಯಿಂದ ಸ್ಥಾನ ಕಿತ್ತುಕೊಳ್ಳಲು ಅವರೇ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ಅವರು ಲೋಕಸಭಾ ಚುನಾವಣೆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಇನ್ನೂ ಕೃಷ್ಣಪ್ಪ ತಮ್ಮ ಮಗನ ವಿಚಾರದಲ್ಲಿ ತೀರ್ಮಾನವನ್ನು ಪಕ್ಷದ ನಾಯಕರಿಗೆ ಬಿಟ್ಟಿದ್ದಾರೆ.

SCROLL FOR NEXT