ಎಚ್ ಡಿ ಕುಮಾರಸ್ವಾಮಿ-ರೈತ ಮಹಿಳೆ
ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 4 ವರ್ಷದಿಂದ ನೀನು ಎಲ್ಲಿ ಮಲಗಿದ್ದೆ? ಎಂದು ಪ್ರಶ್ನಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ರೈತ ಮಹಿಳೆ ಜಯಶ್ರೀ ಗುರುನ್ನವರ್ ಅವರು ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿವಿಧ ಬೇಡಿಕೆ ಹಾಗೂ ದರ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಕಟುವಾಗಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾಲ್ಕು ವರ್ಷಗಳಿಂದ ಎಲ್ಲಿ ಮಲಗಿದ್ದೆ? ಈಗ ಮಾತನಾಡೋಕೆ ಬಂದಿದ್ದೀರಾ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕುವಾಗ ನನ್ನ ನೆನಪಾಗಲಿಲ್ಲವೆ ಎಂದು ಪ್ರಶ್ನಿಸಿದ್ದರು.
ಇದೀಗ ಮುಖ್ಯಮಂತ್ರಿಗಳ ಹೇಳಿಕೆಯಿಂದ ಮನನೊಂದ ಜಯಶ್ರೀ ಅವರು ಸನ್ಮಾನ್ಯ ಮುಖ್ಯಮಂತ್ರಿಗಳು ಈ ರೀತಿ ಮಾತನಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ. ಒಬ್ಬ ಹೆಣ್ಣು ಕುಮಾರಸ್ವಾಮಿಗಳು ಈ ರೀತಿ ಪ್ರಶ್ನಿಸುವ ಮೂಲಕ ಅವರು ಹೆಣ್ಣು ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ಜಯಶ್ರೀ ಕಣ್ಣೀರು ಹಾಕಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ನವೆಂಬರ್ 19ಕ್ಕೆ ಬಂದು ಸಭೆ ನಡೆಸುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಇದೀಗ ರೈತರನ್ನು ನವೆಂಬರ್ 20ಕ್ಕೆ ಬೆಂಗಳೂರಿಗೆ ಬರುವಂತೆ ಸೂಚಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಸ್ತುತ ಹೋರಾಟ ನಿರತ ರೈತರ ಮೇಲೆ ಪೊಲೀಸರು ಕೇಸ್ ದಾಖಲಿಸಿ ಹಿಂಡಗಾಲ ಜೈಲಿಗೆ ಕರೆದೊಯ್ಯುವ ಮೂಲಕ ರಾಜ್ಯ ಸರ್ಕಾರ ರೈತರ ಧ್ವನಿಯನ್ನು ನಿಲ್ಲಿಸುವ ಕೆಲಸ ಮಾಡಿಸುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos