ಅನಿತಾ ಕುಮಾರಸ್ವಾಮಿ, ಸಿಎಂ ಲಿಂಗಪ್ಪ ಮತ್ತು ರುದ್ರೇಶ್
ಬೆಂಗಳೂರು: ರಾಮನಗರ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ರಾಮನಗರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಸಮ್ಮಿಶ್ರ ಸರ್ಕಾರದ ಒಪ್ಪಂದದಂತೆ ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿ, ಬಿಜೆಪಿ ವಿರುದ್ಧ ಹೋರಾಡುವುದಾಗಿದೆ. ಇದಕ್ಕೆ ಕಾಂಗ್ರೆಸ್ ಪೂರ್ಣ ಬೆಂಬಲ ನೀಡಬೇಕು ಹಾಗೂ ತನ್ನ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದು, ಇನ್ನೂ ಶಾಸಕ ಸಿದ್ದು ನ್ಯಾಮಗೌಡ ನಿಧನದಿಂದ ತೆರವಾಗಿರುವ ಜಮಖಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡುವುದು ಎಂಬುದಾಗಿ ಒಪ್ಪಂದ ನಡೆದಿದೆ.
ಆದರೆ ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸದೇ ಜೆಡಿಸ್ ಗೆ ಬೆಂಬಲ ಸೂಚಿಸಿರುವುದು ಜಿಲ್ಲಾ ಮುಖಂಡರ ಅಸಮಾಧಾಕ್ಕೆ ಕಾರಣವಾಗಿದೆ, ಮಾಜಿ ಶಾಸಕ ಸಿಎಂ ಲಿಂಗಪ್ಪ ಸೇರಿದಂತೆ ಹಲವರು ಕಾಂಗ್ರೆಸ್ ನ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ತನ್ನ ಆಧಿಪತ್ಯ ಮುಂದುವರಿಸಲು ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಬೇಕಾಗಿತ್ತು, ಆದರೆ ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ, ಕ್ಷೇತ್ರದಲ್ಲಿ ಪಕ್ಷದ ನಾಯಕತ್ವದ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಬಿಜೆಪಿ ಮುಂದಾಗಿದೆ, ಮಾಜಿ ಶಾಸಕ ಸಿಎಂ ಲಿಂಗಪ್ಪ ಅವರು ಪುತ್ರ ಶೇಖರ್ ಲಿಂಗಪ್ಪ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ, ಉಪ ಚುನಾವಣೆ ಕಾರಣದಿಂದಾಗಿ ಹಲವರು ತಮ್ಮ ಪಕ್ಷ ನಿಷ್ಠೆ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ರಾಮನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ ರುದ್ರೇಶ್ ಉಪ ಚುನಾವಣೆಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos