ಬೆಂಗಳೂರು: ಸ್ಥಳೀಯ ಮುಖಂಡರ ವಿರೋಧದ ನಡುವೆಯೂ ಮುಂಬರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿದ್ದು, ದೋಸ್ತಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಮಂಡ್ಯ ಮತ್ತು ರಾಮನಗರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಿರುವ ಕಾಂಗ್ರೆಸ್ ತೀರ್ಮಾನಕ್ಕೆ ಸ್ಥಳೀಯ ಮುಖಂಡರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಂಡ್ಯ ಹಾಗೂ ರಾಮನಗರ ಕ್ಷೇತ್ರಗಳನ್ನು ಜೆಡಿಎಸ್ ಗೆ ಶಿವಮೊಗ್ಗ, ಬಳ್ಳಾರಿ ಮತ್ತು ಜಮಖಂಡಿ ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮೈತ್ರಿ ಮಾಡಿಕೊಳ್ಖದಿದ್ದರೆ, ಫಲಿತಾಂಶದ ಮೇಲೆ ಭಾರೀ ಪರಿಣಾಮ ಬೀರಲಿದ್ದು, ಇದರ ಲಾಭ ಬಿಜೆಪಿಗೆ ಸಿಗಲಿದೆ.ಒಂದು ವೇಳೆ ಉಪಚುನಾವಣೆಯಲ್ಲಿ ಹಿನ್ನಡೆಯಾದರೆ, ಸರ್ಕಾರದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಡಿರುವ ಆಕಾಂಕ್ಷೆಗಳು ಬಂಡಾಯ ಏಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಮೈತ್ರಿಗೆ ಮುಂದಾಗಿದೆ.
ಇನ್ನೂ ಮಾಜಿ ಶಾಸಕ ಹಾಗೂ ಎಂಎಲ್ ಸಿ ಸಿಎಂ ಲಿಂಗಪ್ಪ ಮತ್ತು ಇಕ್ಬಾಲ್ ಹುಸೇನ್ ಎಐಸಿಸಿ ಕಾರ್ಯದರ್ಶಿ ಕೆ,ಸಿ ವೇಣು ಗೋಪಾಲ್ ಅವರನ್ನು ಭೇಟಿ ಮಾಡಿ ರಾಮನರದಿಂದ ಜೆಡಿಎಸ್ ನಿಂದ ಸ್ಪರ್ಧಿಸುತ್ತಿರುವ ಅನಿತಾ ಕುಮಾರ ಸ್ವಾಮಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ, ರಾಮನಗರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಒತ್ತಾಯಿಸಿದ್ದಾರೆ,
ಒಂದು ವೇಳೆ ರಾಮನಗರದಿಂದ ಸ್ಪರ್ಧಿಸಲು ಟಿಕೆಟ್ ನೀಡದಿದ್ದರೇ ಪಕ್ಷ ತೊರೆದು ಬಿಜೆಪಿ ಸೇರುವುದಾಗಿ, ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದ ಇಕ್ಬಾಲ್ ಹುಸೇನ್ ಬೆದರಿಕೆಯೊಡ್ಡಿದ್ದಾರೆ,
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಸೇನ್ 69 ಸಾವಿರ ಮತ ಗಳಿಸಿದ್ದರು, ರಾಮನಗರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಪಕ್ಷದ ಕಾರ್ಯಕರ್ತರ ಹಾಗೂ ನಾಯಕರ ವಿರೋಧವಿದೆ ಎಂದು ಹೇಳಿದ್ದಾರೆ,ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ,ಮುಂದಿನ ನಿರ್ಧಾರ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ಹುಸೇನ್ ನಿಲುವಿಗೆ ಬೆಂಬಲ ಸೂಚಿಸಿರುವ ಸಿಎಂ ಲಿಂಗಪ್ಪ, ಇನ್ನೂ ಎರಡು ಮೂರು ದಿನಗಳಲ್ಲಿ ಹೈ ಕಮಾಂಡ್ ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೇ, ತಾವು ಕೂಡ ಒಂದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈಗಾಗಲೇ ಲಿಂಗಪ್ಪ ಅವರ ಪುತ್ರ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ,. ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿರುವ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ಧಾರಕ್ಕೆ ರಾಮನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ,
ಇನ್ನೂ ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಸಚಿವ ಪುಟ್ಟರಾಜು ಪರಸ್ಪರ ವಾಗ್ದಾಳಿ ನಡೆಸಿದ್ದಾರೆ, ಇನ್ನೂ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಶಾಸಕ ಎಚ್,ಸಿ ಬಾಲಕೃಷ್ಣ ಹಾಗೂ ಚಲುವರಾಯ ಸ್ವಾಮಿ ಮುಂತಾದವರು ರಾಜಕೀಯ ಜೀವನಕ್ಕೆ ಕುತ್ತು ಎದುರಾಗಿದೆ,ಇದನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಅವರನ್ನು ತನ್ನತ್ತ ಸೆಳೆಯಲು ಓಲೈಕೆಗೆ ಮುಂದಾಗಿದೆ,
2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಚಿತ್ರದುರ್ಗ, ಶಿವಮೊಗ್ಗ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ,ಮಂಡ್ಯ, ಚಾಮರಾಜನಗರ, ತುಮಕೂರು,ಹಾಗೂ ಬೆಂಗಳೂರು ಉತ್ತರ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿ ನೀಡಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೆ ಇದರಿಂದ ಕಾಂಗ್ರೆಸ್ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.
ಕೇವಲ ಮೂರು ಸ್ಥಾನಗಳಿಗಷ್ಟೇ ಜೆಡಿಎಸ್ ಅರ್ಹತೆ ಹೊಂದಿರುವುದು, ಅದಕ್ಕಿಂತ ಹೆಚ್ಚಿನ ಸೀಟು ನೀಡಿದರೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೇಳುತ್ತದೆ ಎಂದು ರಾಜಕೀಯ ವಿಶ್ಲೇಷಕ ಹರೀಶ್ ರಾಮಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos