ರಾಜಕೀಯ

ಕೇಂದ್ರದಿಂದ ಆದಾಯ ತೆರಿಗೆ ಇಲಾಖೆ ದುರ್ಬಳಕೆ: ಉಪ ಮುಖ್ಯಮಂತ್ರಿ ಪರಮೇಶ್ವರ

Manjula VN
ಬೆಂಗಳೂರು: ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ. 
ರಾಷ್ಟ್ರ ರಾಜಧಾನಿ ನವದೆಹಲಿಯ ನಿವಾಸದಲ್ಲಿ ರೂ.5 ಕೋಟಿ ಪತ್ತೆಯಾದ ಹಿನ್ನಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಲು ಕೇಂದ್ರ ಸರ್ಕಾರದ ಅಧೀನದ ಜಾರಿ ನಿರ್ದೇಶನಾಲಯ ಸಜ್ಜಾಗಿದೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ಆದಾಯ ತೆರಿಗೆ ಇಲಾಖೆಯನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅಷ್ಟೇ ಅಲ್ಲ, ಅನೇಕರ ವಿರುದ್ಧ ಇದೇ ರೀತಿಯ ಕೆಲಸ ಮಾಡುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಜನರು ಇದಕ್ಕೆ ಉತ್ತರ ನೀಡಲಿದ್ದಾರೆಂದು ಹೇಳಿದ್ದಾರೆ. 
ಆದಾಯ ತೆರಿಗೆ ಇಲಾಖೆ ದಾಳಿ ವೇಲೆ ದೆಹಲಿಯ ಫ್ಲ್ಯಾಟ್ ವೊಂದರಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ಸುಮಾರು ರೂ.5 ಕೋಟಿ ಅಕ್ರಮ ಹಣ ಪತ್ತೆಯಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ ದೂರು ವರ್ಗಾಯಿಸಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಸದ್ಯದಲ್ಲಿಯೇ ಬಂಧನ ಮಾಡಲು ಮುಂದಾಗಲಿದ್ದಾರೆಂಬ ವದಂತಿ ದಟ್ಟವಾಗತೊಡಗಿದೆ. 
SCROLL FOR NEXT