ಬೆಂಗಳೂರು: ಅನರ್ಹ ಶಾಸಕ ಬಿ ಸಿ ಪಾಟೀಲ್ ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲನಿಯ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯವರನ್ನು ಸೌಜನ್ಯಕ್ಕೆ ಭೇಟಿ ಮಾಡಿದ್ದೆ. ಹಿರೇಕೆರೂರು ಅಭಿವೃದ್ಧಿ ಬಗ್ಗೆ ಅವರೊಂದಿಗೆ ಚರ್ಚಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಏಕ ಪಕ್ಷೀಯವಾಗಿ ಕೆಲವರ ಮಾತು ಕೇಳಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ಇದರಿಂದ ನಾವು ವಿಚಲಿತರಾಗಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಕ್ಕಾಗಿ ಮೊರೆ ಹೋಗಿದ್ದೇವೆ. ನ್ಯಾಯಾಲಯದಲ್ಲಿ ನಮಗೆ ಖಂಡಿತ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಏನು ಬೇಕಾದರೂ ಮಾಡಲಿ, ಕಾಂಗ್ರೆಸ್ ನವರು ಮಾಡಿರುವ ಅನರ್ಹತೆಯನ್ನು ಮತದಾರರು ಅರ್ಹತೆಯಾಗಿ ಬದಲಿಸುತ್ತಾರೆಂಬ ವಿಶ್ವಾಸ ನಮಗಿದೆ ಎಂದರು.
ನಾವು ಅಭಿವೃದ್ಧಿ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇವೆ. ನಾನು ಮತ್ತೆ ಚುನಾವಣೆಯಲ್ಲಿ ಸ್ಫರ್ಧೆ ಮಾಡಿ ಗೆಲ್ಲುತ್ತೇನೆ. ಬಿಜೆಪಿ ಸೇರ್ಪಡೆಗೆ ಬಗ್ಗೆ ಕ್ಷೇತ್ರದ ಮತದಾರರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.