ರಾಜಕೀಯ

ಉಪಚುನಾವಣೆ: ಅಭ್ಯರ್ಥಿಗಳ ಕಾರ್ಯಕ್ಷಮತೆ ಮಾಹಿತಿ ಪಡೆದೆ ಸಿಎಂ, ಬಿಜೆಪಿ ಹಿರಿಯ ನಾಯಕರು

Manjula VN

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯಗೊಂಡ ಬಳಿಕ ಆಯಾ ಕ್ಷೇತ್ರಗಳ ಅಭ್ಯರ್ಥಿಗಳ ಕಾರ್ಯಕ್ಷಮತೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಹಿರಿಯ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ಬಾರಿಯ ಉಪಚುನಾವಣೆಯಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಬಿಜೆಪಿ ಪರವಾಗಿ ಬಂದಿವೆ. 15 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಫಲಿತಾಂಶಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು 10-11 ಕ್ಷೇತ್ರಗಳಲ್ಲಿ ಏನೇ ಆದರೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮತದಾನದ ಮಾದರಿ ತಿಳಿದುಕೊಳ್ಳುವ ಸಲುವಾಗಿ ಪ್ರತೀ ಬೂತ್ ಗಳಲ್ಲೂ ವರದಿಗಳನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ನಿರೀಕ್ಷಿತ ಮಟ್ಟದಲ್ಲಿ ಪಕ್ಷಕ್ಕೆ ಬೆಂಬಲ ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಪ್ರಸ್ತುತ ಪಕ್ಷ ನಾಯಕರು 10-11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪ್ಡಿಸಿದ್ದಾರೆ. ಮತ್ತಷ್ಟು ಕ್ಷೇತ್ರಗಳಲ್ಲಿ ಗೆದ್ದಿದ್ದೇ ಆದರೆ, ಅದು ನಮಗೆ ಬೋನಸ್ ಆಗಲಿದೆ ಎಂದು ತಿಳಿಸಿದ್ದಾರೆ. 

ಉತ್ತರ್ ಕರ್ನಾಟಕ ಹಾಗೂ ಬೆಂಗಳೂರಿನ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಕೆ.ಆರ್.ಪೇಟೆ ಹಾಗೂ ಹಣಸೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದೆ. 

ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಅವರನ್ನು ಸೋಲಿಸಲು ಜೆಡಿಎಸ್ ಉತ್ಸುಕವಾಗಿತ್ತು. ಹೀಗಾಗಿ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿರಬಹುದು. ಕೆಆರ್ ಪೇಟೆಯಲ್ಲಿ ಕಾಂಗ್ರೆಸ್ ಜೆಡಿಎಸ್'ಗೆ ಬೆಂಬಲ ನೀಡಬಹುದು. ಎಲ್ಲಾ ಕ್ಷೇತ್ರಗಳ ಬೂತ್'ಗಳ ಮಾಹಿತಿ ಸಿಕ್ಕ ಕೂಡಲೇ ನಮಗೆ ಸ್ಪಷ್ಟ ಮಾಹಿತಿ ತಿಳಿದುಬರಲಿದೆ. ಪಕ್ಷದ ಹಿರಿಯ ನಾಯಕರು ಅಭ್ಯರ್ಥಿಗಳ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದಿದ್ದಾರೆ. 

ಇನ್ನು ಕಾಂಗ್ರೆಸ್ ರಾಣೆಬೆನ್ನೂರು, ಹುಣಸೂರು, ಕಾಗವಾಡ, ಅಥಣಿ, ಶಿವಾಜಿನಗರ ಹಾಗೂ ಕೆ.ಆರ್.ಪೇಟೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದೆ. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, 15 ಕ್ಷೇತ್ರಗಳ ಬೆಳವಣಿಗೆಗಳನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ಸ್ಥಳೀಯ ನಾಯಕರೊಂದಿಗೆ ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರು ಕಾರ್ಯನಿರ್ವಹಿಸುತ್ತಿದ್ದು, ಮನಸ್ಥಾಪಗಳನ್ನು ದೂರಾಗಿಸಲು ಯತ್ನಿಸುತ್ತಿದ್ದಾರೆಂದು ಹೇಳಿದ್ದಾರೆ. 

SCROLL FOR NEXT