ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!

Lingaraj Badiger

ಬೆಂಗಳೂರು: ಮಕರ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ವಿಸ್ತರಣೆ ಮಾಡಲಿದ್ದು, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮಂತ್ರಿಗಿರಿಗಾಗಿ ಲಾಬಿ ತೀವ್ರಗೊಳಿಸಿದ್ದಾರೆ.

ಅದರಲ್ಲೂ ಪ್ರಮುಖವಾಗಿ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಪದೇ ಪದೆ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ, ಸಚಿವ ಸ್ಥಾನಕ್ಕಾಗಿ ನಿರಂತರ ಒತ್ತಡ ಹೇರುತ್ತಿದ್ದಾರೆ. ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸ ಧವಳಗಿರಿಗೆ ಆಗಮಿಸಿದ್ದ ಉಮೇಶ್ ಕತ್ತಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದರು. 

ಮತ್ತೊಂದೆಡೆ ಯಡಿಯೂರಪ್ಪ ಅವರ ನಿವಾಸಕ್ಕೆ ಅನರ್ಹ ಶಾಸಕ ಆರ್.ಶಂಕರ್ ಹಾಗೂ ಎಂ.ಟಿ.ಬಿ.ನಾಗರಾಜ್‌ ಕೂಡ ಭೇಟಿ ನೀಡಿ ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸಿದರು. ಸಚಿವ ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಸಚಿವ ಸ್ಥಾನಕ್ಕಾಗಿ ಪರಿಗಣಿಸುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇತ್ತ ಆರ್.ಶಂಕರ್ ಸಹ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರಿಂದ ತೆರವಾದ ಎಂಎಲ್ ಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ತಮ್ಮನ್ನು ಎಂಎಲ್ ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ತೆರವಾಗಿರುವ ಒಂದು ಎಂಎಲ್ ಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.

ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಎಂ.ಎಲ್.ಸಿ ಮಾಡಲು ಉದ್ದೇಶಿಸಿದ್ದಾರೆ. ಲಕ್ಷ್ಮಣ್ ಸವದಿ ಡಿಸಿಎಂ ಸ್ಥಾನ ಉಳಿಸಿಕೊಳ್ಳಬೇಕಾದರೆ, ಆರು ತಿಂಗಳೊಳಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಾಗಿದ್ದು, ಈಗ ಆ ಅವಧಿ ಮುಗಿಯುತ್ತಾ ಬಂದಿದೆ. ಹೀಗಾಗಿ ತೆರವಾಗಿರುವ ಒಂದು ಪರಿಷತ್ ಸ್ಥಾನವನ್ನು ಸವದಿಗೆ ನೀಡಲು ಸಿಎಂ ಒಲವು ಹೊಂದಿದ್ದಾರೆ. ಆದರೆ ಆರ್.ಶಂಕರ್ ಪರಿಷತ್ ಸ್ಥಾನವನ್ನು ತಮಗೆ ನೀಡಿ, ಸಚಿವರನ್ನಾಗಿ ಮಾಡುವಂತೆ ಒತ್ತಡದ ತಂತ್ರ ಅನುಸರಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಸಹ ಗೊಂದಲದಲ್ಲಿದ್ದಾರೆ ಎನ್ನಲಾಗಿದೆ.

SCROLL FOR NEXT