ತುಮಕೂರು: ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಿದ್ದ ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರು ಈ ಹಿಂದೆ ತಾವು ನೀಡಿದ್ದ ಮಾತಿನಿಂತೆ ಕೂಡಲೇ ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಡಿಸಿಎಂ ಜಿ ಪರಮೇಶ್ವರ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಆಡಿಯೋ ತಮ್ಮದೆಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ ಈಗ ಅವರೇ ಸಂಭಾಷಣೆ ನಡೆದದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದ್ದರಿಂದ ರಾಜೀನಾಮೆ ನೀಡಲಿ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಒತ್ತಾಯಿಸಿದ್ದಾರೆ.
'ಆಡಿಯೋ ಬಗ್ಗೆ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಹಾಗಿದ್ದಮೇಲೆ ಅವರೇ ಹೇಳಿದಂತೆ ರಾಜಕೀಯ ನಿವೃತ್ತಿ ಪಡೆಯಬೇಕು. ಈ ವಿಚಾರವನ್ನು ನಾವು ಸ್ಪೀಕರ್ ಬಳಿಗೆ ಕೊಂಡೊಯ್ಯುತ್ತೇವೆ. ನಾವು ಕಾನೂನು ಪಾಲಿಸುವವರು. ಆದ್ದರಿಂದ ಇದನ್ನು ಸ್ಪೀಕರ್ ಗೆ ತಿಳಿಸುತ್ತೇವೆ. ನಂತರ ಅವರು ಯಾವುದಾದರೂ ಕ್ರಮ ಕೈಗೊಳ್ಳಲಿ. ಕಾನೂನಿನ ಪ್ರಕಾರ ಯಡಿಯೂರಪ್ಪ ಅವರ ಶಾಸಕತ್ವ ಅನರ್ಹ ಆಗಬೇಕು ಎಂದೂ ಹೇಳಿದರು.
ಇದೇ ವೇಳೆ ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕೀಳು ಮಟ್ಟದ ರಾಜಕಾರಣಕ್ಕಿಳಿದಿದೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.