ಬೆಂಗಳೂರು: ಹಾಸನದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಶಾಸಕರ ಮನೆಯ ಸಮೀಪ ಕೆಲ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ತಮಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗಬಾರದು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಕೋರಿದ್ದಾರೆ.