ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಮಾಧ್ಯಮಗಳ ವರದಿಗಳಿಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳ್ಳುತ್ತಿದೆ ಎಂಬುದು ತಿಳಿಯುತ್ತಿದೆ. ಆಪರೇಷನ್ ಕಮಲ ಮಾಡುವುದಕ್ಕೆ ನಾವು ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಒಂದು ವೇಳೆ ಅತಂತ್ರ ಪರಿಸ್ಥಿತಿ ಎದುರಾದರೆ ಸುಮ್ಮನೆ ಕುಳಿತುಕೊಳ್ಳಲು ನಾವೇನು ಸನ್ಯಾಸಿಗಳಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್-ಜೆಡಿಎಸ್ ಶಾಸಕರ ಅಸಮಾಧಾನದಿಂದ ರಾಜಕಾರಣದಲ್ಲಿ ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಇದರ ಬಗ್ಗೆ ಭವಿಷ್ಯ ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಅಸ್ಥಿರಗೊಂಡರೆ ಸರ್ಕಾರ ರಚನೆಗೆ ಬಿಜೆಪಿ ಸಿದ್ಧಗೊಳ್ಳಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಲೋಕಸಭೆ ಚುನಾವಣೆಗೆ 12 ಸೀಟುಗಳನ್ನು ನೀಡಬೇಕೆಂದು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಡುವೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುವ ಮೂಲಕ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಮಾಧ್ಯಮಗಳ ವರದಿಗಳ ಮೂಲಕ ಸಾಬೀತಾಗುತ್ತಿದೆ. ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ರಮೇಶ್ ಜಾರಕಿಹೊಳಿ ಭೇಠಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ರೈಲ್ವೇ ಸಚಿವರನ್ನು ಭೇಟಿಯಾಗುವುದರಲ್ಲಿಯೇ ಸಮಯ ಮುಗಿಯಿತು. ಆದರೆ, ಭೋಜನ ಮಾಡಿದರು ಎಂಬ ಸುದ್ದಿಗಳು ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರ ಕಚ್ಚಾಟಗಳನ್ನು ತೋರಿಸುತ್ತದೆ. ನಾನು ರಮೇಶ್ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos