ನವದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಹಾಗೂ ದೊಡ್ಡ ಮೊತ್ತದ ಹಣದ ಆಮಿಷವೊಡ್ಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಆರೋಪಿಸಿದ್ದಾರೆ.
ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿಲ್ಲ. ಮುಖ್ಯಮಂತ್ರಿಗಳೇ ನಮ್ಮ ಶಾಸಕರಿಗೆ ಆಮಿಷವೊಡ್ಡುತ್ತಿದ್ದಾರೆ ಎಂದು ಬಿಎಸ್ ವೈ ಹೇಳಿದ್ದಾರೆ.
ಇದೇ ವೇಳೆ, ನಮಗೆ ಸಂಖ್ಯಾಬಲ ಇಲ್ಲ. ಹೀಗಾಗಿ ಬಿಜೆಪಿ ಸರ್ಕಾರ ರಚಿಸುವ ಯಾವುದೇ ಯತ್ನ ಮಾಡುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಮೂವರು ಕಾಂಗ್ರೆಸ್ ಶಾಸಕರು ನಾಪತ್ತೆ ವಿಚಾರ ತಮಗೆ ಗೊತ್ತಿಲ್ಲ ಎಂದಿದ್ದಾರೆ.
ಬಿಜೆಪಿಯವರು ಕಾಂಗ್ರೆಸ್ ಅತೃಪ್ತ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದರೆ, ಕಾಂಗ್ರೆಸ್, ಬಿಜೆಪಿಯ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ. ಒಂದು ವೇಳೆ ಕಾಂಗ್ರೆಸ್ ನ ಅತೃಪ್ತರು ರಾಜೀನಾಮೆ ನೀಡಿ, ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದರೆ, ನಾಳೆಯೇ ಬಿಜೆಪಿಯ ಐವರು ಶಾಸಕರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು, ಬಹುಮತ ಸಾಬೀತಿಗೆ ಬೇಕಾದ ನಂಬರ್ ಸಿಗದಂತೆ ಮಾಡಬೇಕಾಗುತ್ತದೆ ಎಂದು ಎಐಸಿಸಿ ಉನ್ನತ ಮೂಲಗಳು ತಿಳಿಸಿವೆ.