ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು, ಶಾಸಕರನ್ನು ಒಬ್ಬೊಬ್ಬರನ್ನಾಗಿ ಕರೆಯುವ ದುಸ್ಥಿತಿ ಕಾಂಗ್ರೆಸ್ ಬಂದಿದೆ ಎಂದು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಇಂದು ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಯಾವ ದುಸ್ಥಿತಿ ಗೆ ಕಾಂಗ್ರೆಸ್ ಬಂದು ತಲುಪಿದೆ, ಪಕ್ಷದಲ್ಲಿ ಒಮ್ಮತ ಎಷ್ಟಿದೆ, ಅತೃಪ್ತಿ ಅಸಮಾಧಾನ ಎಷ್ಟಿದೆ ಎನ್ನುವುದಕ್ಕೆ ಇಂದಿನ ಶಾಸಕಾಂಗ ಸಭೆ ಸಾಕ್ಷಿಯಾಗಿದೆ ಎಂದರು.
ನಾವು 104 ಶಾಸಕರು ಒಗ್ಗಟಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಲು ನಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಎಲ್ಲಿಗೆ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಬೇರೆ ಪಕ್ಷಗಳ ಆಂತರಿಕ ಚಟುವಟಿಕೆಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಪ್ರಸ್ತುತ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಅವರವರ ಹುಳುಕುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ಹರಿಯಾಣದ ಗುರುಗ್ರಾಮದಲ್ಲಿರುವ ಶಾಸಕರನ್ನು ಬೇರೆ ರೆಸಾರ್ಟ್ಗೆ ಕರೆದೊಯ್ಯಲಾಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಯಡಿಯೂರಪ್ಪ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲ ಶಾಸಕರು ನಾಳೆ ಬೆಂಗಳೂರಿಗೆ ವಾಪಸ್ಸಾಗಲಾಗಲಿದ್ದಾರೆ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos