ಬೆಂಗಳೂರು: ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರದ ಬೆಳವಣಿಗೆಗಳು ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾಗಿರುವುದು ಸ್ಪಷ್ಟವಾಗುತ್ತಿದ್ದು, ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸ್ಪೀಕರ್ ಗೆ ರವಾನಿಸಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ವೈರಲ್ ಆಗತೊಡಗಿದ್ದು, ಮೈತ್ರಿ ಸರ್ಕಾರದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಕೈಬರಹದಲ್ಲಿ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿದೆ. ಆದರೆ ರಮೇಶ್ ಜಾರಕಿಹೊಳಿ ಖುದ್ದಾಗಿ ತೆರಳಿ ಸ್ಪೀಕರ್ ಗೆ ರಾಜೀನಾಮೆ ಪತ್ರ ತಲುಪಿಸದೇ ಇರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ನಿಯಮ ಪಾಲಿಸದ ರಮೇಶ್ ಜಾರಕಿಹೊಳಿ
ಶಾಸಕರ ರಾಜೀನಾಮೆ ಅಂಗೀಕಾರವಾಗಬೇಕಾದರೆ ಖುದ್ದಾಗಿ ತೆರಳಿ ರಾಜೀನಾಮೆ ಪತ್ರವನ್ನು ಸ್ಪೀಕರ್ ಗೆ ತಲುಪಿಸಬೇಕಾಗುತ್ತದೆ. ಫ್ಯಾಕ್ಸ್ ಅಥವಾ ಅಂಚೆ ಮೂಲಕ ತಲುಪಿಸುವ ರಾಜೀನಾಮೆ ಅಂಗೀಕಾರಗೊಳ್ಳುವುದಿಲ್ಲ, ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ನಿಯಮ ಪಾಲನೆ ಮಾಡಿಲ್ಲ ಎಂದು ವಿಶ್ಲೇಶಿಸಲಾಗುತ್ತಿದೆ.