ಬೆಂಗಳೂರು: ತಾವು ಮುಂಬೈ ಅಥವಾ ದೆಹಲಿಗೆ ಹೋಗುವುದಿಲ್ಲ, ಬೆಂಗಳೂರಿನಲ್ಲಿಯೇ ಇದ್ದೇನೆ, ಮುಂಬೈಯಲ್ಲಿರುವ ಶಾಸಕರು ತಮ್ಮನ್ನು ಸಂಪರ್ಕಿಸಿಲ್ಲ, ತಾವು ಕೂಡ ಅವರನ್ನು ಸಂಪರ್ಕಿಸಿಲ್ಲ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಚಿವ ಡಿ ಕೆ ಶಿವಕುಮಾರ್ ಅವರು ತಮ್ಮೊಂದಿಗೆ ಮಾತುಕತೆ ನಡೆಸಿದ್ದಾರೆ, ಇದರಲ್ಲಿ ಯಾವುದೇ ತಪ್ಪಿಲ್ಲ, ಅವರೊಂದಿಗೆ ನಡೆದ ಮಾತುಕತೆಯನ್ನು ಮಾಧ್ಯಮಗಳಲ್ಲಿ ಬಹಿರಂಗ ಪಡಿಸುವ ಅಗತ್ಯವಿಲ್ಲ ಎಂದು ಹೇಳಿದರು
ಕೆಲವು ಮಾಧ್ಯಮಗಳಲ್ಲಿ ನಾನು ಮುಂಬೈಗೆ ಹೋಗುತ್ತಿದ್ದೇನೆ ಎಂದು ಪ್ರಸಾರವಾಗುತ್ತಿದೆ. ಆದರೆ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಸ್ಥಾನ ಬೇಕಾಗಿಲ್ಲ. ಕಳೆದ 30 ವರ್ಷಗಳಲ್ಲಿ ಶಾಸಕನಾಗಿ ಇದ್ದೇನೆ. ಆದರೆ ಯಾವತ್ತೂ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ವಿಧಾನಸಭಾ ಸದಸ್ಯ ಸ್ಥಾನಕ್ಕೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂದು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಅವರೊಂದಿಗೆ ಕೇಳಿ, ಅವರು ಈಗ ನವದೆಹಲಿಯಲ್ಲಿದ್ದಾರೆ. ಅವರು ಸ್ವತಂತ್ರವಾಗಿ ಯೋಚನೆ ಮಾಡುವ ಶಕ್ತಿ ಇರುವ ಶಾಸಕಿ. ಅವರೇ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು
ತಾವು ಯಾರನ್ನೂ ಅನುಸರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ವೈಯಕ್ತಿಕ ತೀರ್ಮಾನ ಕೈಗೊಂಡು ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ ಅವರು, ಈಗ ರಾಜೀನಾಮೆ ಕೊಟ್ಟು ಆಗಿದೆ. ಅದು ಸ್ಪೀಕರ್ ಟೇಬಲ್ ಮುಂದಿದೆ. ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇನೆ ಎಂದು ಹೇಳಿದರು.