ಬೆಂಗಳೂರು: ಮೈತ್ರಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದೆ. ಇತ್ತೀಚಿಗಷ್ಟೇ ಮಂತ್ರಿಯಾಗಿ ಸಂಪುಟ ಸೇರಿದ್ದ ಪಕ್ಷೇತರ ಶಾಸಕ ಹೆಚ್. ನಾಗೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ನಾಗೇಶ್ , ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸ್ ಪಡೆದುಕೊಂಡಿದ್ದು, ಬಿಜೆಪಿಗೆ ಬೆಂಬಲ ನೀಡುವುದಾಗಿ ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ನಾಗೇಶ್ ಉಲ್ಲೇಖಿಸಿದ್ದಾರೆ.
ಜೂನ್ 14 ರಂದು ಜೆಡಿಎಸ್ ಕೋಟಾದಡಿಯಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಹೆಚ್ ನಾಗೇಶ್, ಇಂದು ದಿಢೀರನೇ ರಾಜೀನಾಮೆ ಸಲ್ಲಿಸಿದ್ದಾರೆ. ಇವರು ಕೂಡಾ ಮುಂಬೈಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಡಿ. ಕೆ. ಶಿವಕುಮಾರ್ ಆಪ್ತರಾಗಿರುವ ಹೆಚ್ ನಾಗೇಶ್, ಅವರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿ. ಕೆ. ಸುರೇಶ್, ನಾಗೇಶ್ ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.