ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಸಿಡಿದೆದ್ದು ಮುಂಬೈನಲ್ಲಿರುವ 8 ಅತೃಪ್ತ ಶಾಸಕರ ರಾಜೀನಾಮೆ ಪತ್ರ ಕ್ರಮ ಬದ್ಧವಾಗಿಲ್ಲ ಎಂದು ವಿಧಾನಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ತಿಳಿಸಿದ್ದಾರೆ
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್, ರಾಮಲಿಂಗಾರೆಡ್ಡಿ, ಕೆ. ಸಿ. ನಾರಾಯಣಗೌಡ, ಪ್ರತಾಪ್ ಗೌಡ ಮತ್ತು ಕೆ. ಗೋಪಾಲಯ್ಯ ಸಲ್ಲಿಸಿರುವ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿದ್ದು, ಜುಲೈ 12 ರಂದು ವೈಯಕ್ತಿಕ ವಿಚಾರಣೆಗೆ ಹಾಜರಾಗುವಂತೆ ಆನಂದ್ ಸಿಂಗ್, ಕೆ. ಗೋಪಾಲಯ್ಯ, ಮತ್ತು ಕೆಸಿ ನಾರಾಯಣಗೌಡ ಅವರಿಗೆ ಸೂಚಿಸಲಾಗಿದೆ ಎಂದರು.
ಜುಲೈ 15 ರಂದು ರಾಮಲಿಂಗಾರೆಡ್ಡಿ ಹಾಗೂ ಪ್ರತಾಪ್ ಗೌಡ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಉಳಿದ 8 ಜನರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ. ಕ್ರಮಬದ್ಧ ರೀತಿಯಲ್ಲಿ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ರಮೇಶ್ ಕುಮಾರ್ ತಿಳಿಸಿದರು.
ರೋಶನ್ ಬೇಗ್ ಅವರ ರಾಜೀನಾಮೆ ಪತ್ರವನ್ನು ಸಚಿವಾಲಯದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷ ಕೇಳಿದ್ದು, ಅವರ ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಜುಲೈ 6 ರಂದು ಮಧ್ಯಾಹ್ನದವರೆಗೂ ಕಚೇರಿಯಲ್ಲಿದೇ ಇದ್ದೆ. ಆನಂತರ ಬಂದು 13 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ತಮ್ಮನ್ನೂ ಯಾರೂ ಕೂಡಾ ಭೇಟಿಯಾಗಿಲ್ಲ, ಸಹಿ ಹಾಕಿಲ್ಲ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ಸಂವಿಧಾನದ ಆಶಯ ಎತ್ತಿಹಿಡಿಯುವುದು ನನ್ನ ಕೆಲಸ ಎಂದು ರಾಜ್ಯಪಾಲರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ರಾಜ್ಯಪಾಲರು ಕೂಡಾ ನನ್ನಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ರಮೇಶ್ ಕುಮಾರ್ ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos