ಬೆಂಗಳೂರು: ಮೈತ್ರಿ ಸರ್ಕಾರದ ಆಯಸ್ಸು ಇನ್ನೂ ಎರಡರಿಂದ ಮೂರು ದಿನ ಮಾತ್ರ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗಳೊಂದಿಗೆ ಸದ್ಯದಲ್ಲೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡಲಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆಗೆ ಮುಂದೂಡಲಾಗಿದ್ದು, ಕಚೇರಿಗೆ ಆಗಮಿಸಿದ್ದ ಶಾಸಕರನ್ನು ಬಿಎಸ್ ವೈ ವಿಧಾನಸೌಧಕ್ಕೆ ಕಳುಹಿಸಿಕೊಟ್ಟರು.
ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಕೆ.ಎಸ್.ಈಶ್ವರಪ್ಪ, ಬಿ ಶ್ರೀರಾಮುಲು, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಮತ್ತಿತರು ಪ್ರಮುಖ ನಾಯಕರ ಸಭೆ ನಡೆಸಿದರು. ಮೈತ್ರಿ ಪಕ್ಷಗಳ ಬೆಳವಣಿಗೆ,ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿ ಮುಂದೆ ಕೈಗೊಳ್ಳಬೇಕಾದದ ನಿಲುವುಗಳ ಬಗ್ಗೆ ಚರ್ಚೆ ನಡೆಸಿದರು.
ಬಿಜೆಪಿ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನ ಕೊನೆಯ ಹಂತಕ್ಕೆ ಬಂದು ತಲುಪಿದೆ. ಅವರ ಮುಂದಿನ ನಡೆ ಏನಾಗಲಿದೆ ಎಂದು ಕಾದು ನೋಡುತ್ತೇವೆ. ಶುಕ್ರವಾರ ವಿಧಾನ ಮಂಡಲದ ಅಧಿವೇಶನ ಇದೆ , ನಾಳೆ ಮತ್ತೆ ಶಾಸಕಾಂಗ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.