ಬೆಂಗಳೂರು: ಆಡಳಿತ ಪಕ್ಷದ ಶಾಸಕರ ರಾಜೀನಾಮೆ ಪರ್ವ ಹಾಗೂ ಹಲವು ರಾಜಕೀಯ ಹೈಡ್ರಾಮಾಗಳ ನಡುವೆಯೇ ಶುಕ್ರವಾರ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದೆ.
ಜುಲೈ 12 ರಿಂದ 26 ವರೆಗೆ ಮುಂಗಾರು ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ ಮೇಲ್ಮನೆ ಮತ್ತು ಕೆಳಮನೆಯ ಸಚಿವಾಲಯಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳೆದ ಅಧಿವೇಶನದಲ್ಲಿ ಬಜೆಟ್ ಮಂಡಿಸಿದ್ದರು. ಜುಲೈ ಅಂತ್ಯದವರೆಗೆ ಲೇಖಾನುದಾನಕ್ಕೆ ಮಾತ್ರ ಉಭಯ ಸದನಗಳು ಒಪ್ಪಿಗೆ ನೀಡಿದ್ದವು.
ಬಜೆಟ್ನ ಮುಂದುವರಿದ ಅಧಿವೇಶನ ಇದಾಗಿದ್ದು, ಸರ್ಕಾರಕ್ಕೆ ಈ ಮಾಸಾಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್ಗೆ ಅನುಮೋದನೆ ಪಡೆಯಬೇಕಾದ ಅನಿವಾರ್ಯತೆ ಇದೆ. ಈ ಅಧಿವೇಶನದಲ್ಲಿ ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆದು ಉಭಯ ಸದನಗಳಲ್ಲಿ ಬಜೆಟ್ ಅನುಮೋದನೆಯಾಗಬೇಕಿದೆ.
ಅಧಿವೇಶನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮೈತ್ರಿ ಪಕ್ಷ ಹಾಗೂ ಪ್ರತಿಪಕ್ಷ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಅಧಿವೇಶನದ ಕಾರ್ಯಕಲಾಪಗಳಲ್ಲಿ ಭಾಗಿಯಾಗುವಂತೆ ಹಾಗೂ ಅಗತ್ಯಬಿದ್ದರೆ ವಿಶ್ವಾಸ ಮತಯಾಚಿಸುವ ಸಂದರ್ಭದಲ್ಲಿ ಸರ್ಕಾರದ ಪರ ಮತಚಲಾಯಿಸುವಂತೆ ಕಾಂಗ್ರೆಸ್, ಜೆಡಿಎಸ್ ವಿಪ್ ಜಾರಿಗೊಳಿಸಿದೆ.
ಮೊದಲ ದಿನವಾದ ನಾಳೆ ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರು ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಜನರು ಗುಳೆ ಹೋಗದಂತೆ ಉದ್ಯೋಗ ಸೃಷ್ಟಿ, ಬರ ನಿರ್ವಹಣೆ ಸೇರಿದಂತೆ ಹತ್ತು-ಹಲವು ಜ್ವಲಂತ ಸಮಸ್ಯೆಗಳು ಇದ್ದು, ಅಧಿವೇಶನದಲ್ಲಿ ಜ್ವಲಂತ ಸಮಸ್ಯೆಗಳಿಗಿಂತ ರಾಜಕೀಯ ವಿಚಾರವೇ ಹೆಚ್ಚು ಪ್ರಸ್ತಾಪವಾಗುವ ಸಾಧ್ಯತೆಗಳಿವೆ.
ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಕಲ ಪ್ರಯತ್ನಗಳನ್ನು ನಡೆಸಿದ್ದು, ಈಗಾಗಲೇ ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡಿದೆ. ರಾಜ್ಯ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟು ಬಿಜೆಪಿ ಸದನದಲ್ಲಿ ತೀವ್ರ ಹೋರಾಟ ನಡೆಸಿ ಕಲಾಪಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಸಂದಿಗ್ಧ ಪರಿಸ್ಥಿತಿಯಲ್ಲಿರುವ ಸರ್ಕಾರ ಅಧಿವೇಶನ ನಡೆಸುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos