ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಚಂದ್ರಗ್ರಹಣ ಗಂಡಾಂತರದ ಭೀತಿ: ವಿಶ್ವಾಸ ಮತಯಾಚನೆ ದಿನ ಬದಲಿಸಿದ ಸಿಎಂ

ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದಿರುವ ಮೈತ್ರಿ ಸರ್ಕಾರಕ್ಕೆ ಚಂದ್ರಗ್ರಹಣದ ಭೀತಿ ಎದುರಾಗಿದೆ.

ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದಿರುವ ಮೈತ್ರಿ ಸರ್ಕಾರಕ್ಕೆ ಚಂದ್ರಗ್ರಹಣದ ಭೀತಿ ಎದುರಾಗಿದೆ.
ಜುಲೈ 17ರ ಚಂದ್ರಗ್ರಹಣ ಕಳೆದರೆ ಮೈತ್ರಿ ಸರ್ಕಾರ ಪತನ ಭೀತಿಯಿಂದ ಪಾರಾಗಬಹುದು ಎಂದು ಮುಖ್ಯಮಂತ್ರಿ ಅವರ ಆಪ್ತ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. 
ಜುಲೈ 2ರಂದು ಸೂರ್ಯಗ್ರಹಣ ಸಂಭವಿಸಿದ್ದು, ಜು. 17ರಂದು ಚಂದ್ರಗ್ರಹಣವಾಗಲಿದೆ. ಅದೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೇಳಿ ಮೇಷರಾಶಿಯವರು. ಈ ರಾಶಿಯವರಿಗೆ ಗಂಡಾಂತರವಿದೆ ಎಂಬುದು ದೇವೇಗೌಡರ ಕುಟುಂಬಕ್ಕೆ ಆತಂಕ ತಂದಿದೆ. ಈ ನಡುವೆ ಜುಲೈ ತಿಂಗಳಲ್ಲಿಯೇ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕರು ರಾಜೀನಾಮೆ ನೀಡುವ ಮೂಲಕ ಸರ್ಕಾರದ ಪತನಕ್ಕೆ ಮುಹೂರ್ತ ನಿಗದಿ ಮಾಡಿರುವುದು ಹಾಗೂ ಗ್ರಹಣ ಸಂಭವಿಸುತ್ತಿರುವುದು ಕಾಕತಾಳೀಯವಾಗಿದೆ.
ವಿಧಾನಸಭೆ ಅಧಿವೇಶನ ಆರಂಭವಾದ ಮೊದಲ ದಿನ ಜು 12ರಂದು ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ದಿನಾಂಕ ನಿಗದಿ ಮಾಡುವಂತೆ ಸ್ಪೀಕರ್ ಅವರಿಗೆ ಮನವಿ ಮಾಡಿದ್ದರು. ಮುಖ್ಯಮಂತ್ರಿ ಬುಧವಾರ ವಿಶ್ವಾಸಮತಯಾಚನೆಗೆ ಬಹುತೇಕ ನಿರ್ಧರಿಸಿದ್ದರು. ಆದರೆ ಇಂದು ದಿಢೀರ್ ಆಗಿ ದಿನಾಂಕ ಬದಲಾಯಿಸಿದ್ದಾರೆ. ಅದೂ ಜುಲೈ 17ರ ಬುಧವಾರದ ಬದಲಾಗಿ ಜು 18ರಂದು ಸದನದಲ್ಲಿ ವಿಶ್ವಾಸ ಮತ ಯಾಚನೆಗೆ ತೀರ್ಮಾನಿಸಿದ್ದಾರೆ.
ಮಂಗಳವಾರ ಸುಪ್ರೀಂ ಕೋರ್ಟ್ ನಲ್ಲಿ ರಾಜೀನಾಮೆ ನೀಡಿರುವ ಶಾಸಕರ ಅರ್ಜಿ ವಿಚಾರಣೆ ನಡೆಯಲಿದೆ. ಈ ನಡುವೆ ಚಂದ್ರಗ್ರಹಣ ಹಿನ್ನಲೆಯಲ್ಲಿ ಬುಧವಾರ ಬೇಡ ಶುಕ್ರವಾರ ವಿಶ್ವಾಸ ಮತಯಾಚಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ ಸ್ಪೀಕರ್ ಬುಧವಾರವೂ ಬೇಡ, ಶುಕ್ರವಾರವೂ ಬೇಡ, ಗುರುವಾರ ವಿಶ್ವಾಸಮತಯಾಚಿಸಿ ಎಂದು ಸೂಚಿಸಿದ್ದಾರೆ.
ಆ ಮೂಲಕ ಚಂದ್ರ ಗ್ರಹಣ ಸಂಭವಿಸಿದ ಮರು ದಿನ ಗ್ರಹಣ ಪ್ರಭಾವ ಇರುತ್ತದೆ. ಹೀಗಾಗಿ ಮರುದಿನ ಅಂದರೆ ಜು. 18ರಂದು ವಿಶ್ವಾಸ ಮತ ಯಾಚಿಸಿದರೆ ಮೈತ್ರಿ ಸರ್ಕಾರ ಉಳಿದುಕೊಳ್ಳಬಹುದು ಎಂಬ ಜ್ಯೋತಿಷಿಗಳ ಸಲಹೆಯನ್ನು ನಂಬಿ ದಿನಾಂಕ ನಿಗದಿ ಮಾಡಿದ್ದಾರೆ ಎನ್ನಲಾಗಿದೆ.
ಮತ್ತೊಂದು ಮಾಹಿತಿ ಪ್ರಕಾರ ವಿಶ್ವಾಸಮತ ಯಾಚನೆ ಮಾಡಿ ಬಹುಮತ ಪಡೆಯಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತಿದೆ. ಹೀಗಾಗಿ ಗ್ರಹಣ ಸಂಭವಿಸಿದ ಬುಧವಾರ ರಾಜೀನಾಮೆ ನೀಡುವುದು ಒಳ್ಳೆಯ ದಿನವಲ್ಲ ಎಂಬ ಲೆಕ್ಕಾಚಾರ ಅವರದ್ದಾಗಿದೆ.
ಜೊತೆಗೆ ಸಚಿವ ಎಚ್ ಡಿ ರೇವಣ್ಣ ಅವರೂ ಸಹ ಸರ್ಕಾರ ರಕ್ಷಿಸುವಂತೆ ಹಾಗೂ ಕುಮಾರಸ್ವಾಮಿ ಅವರ ಮೇಷರಾಶಿ ಮೇಲೆ ಪ್ರಭಾವ ಬೀರಿ ಸ್ಥಾನ ಕಳೆದುಕೊಳ್ಳದಂತೆ ಉಳಿಸಲು ಶಕ್ತಿ ದೇವತೆಗಳ ಮೊರೆ ಹೋಗಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ, ಶೃಂಗೇರಿ ಶಾರದೆ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾ ಪರಮೇಶ್ವರಿ, ಸೌತಡ್ಕ ಗಣಪತಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ಸೇರಿದಂತೆ ಹಲವು ದೇವಾಲಯಗಳಲ್ಲಿ ಬರಿಗಾಲಲ್ಲಿ ತೆರಳಿ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವೇಗೌಡರ ಕುಟುಂಬದ ದೈವಭಕ್ತಿ, ಗ್ರಹಣ, ಪೂಜೆ , ಹೋಮ ಹವನಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕುರ್ಚಿಯನ್ನು ಉಳಿಸಲು, ವಿಶ್ವಾಸಮತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹೇಗೆ ಸಹಕಾರಿಯಾಗಲಿದೆ ಎನ್ನುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT