ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಅವರು ವಿಧಾನಸಭೆ ಕಲಾಪಕ್ಕೆ ಹಾಜರಾಗಲಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವ ವೇಳೆ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಾನು ಯಾವುದೇ ಸ್ಥಾನಮಾನಕ್ಕೋಸ್ಕರ ರಾಜೀನಾಮೆ ನೀಡಿಲ್ಲ. ಪಕ್ಷದ ಆಂತರಿಕ ವಿಚಾರಕ್ಕಾಗಿ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ವಾಪಸ್ ಪಡೆಯಬೇಕೇ, ಬೇಡವೇ ಎಂಬ ನನ್ನ ನಿರ್ಧಾರವನ್ನು ಗುರುವಾರ ವಿಶ್ವಾಸಮತ ಯಾಚನೆ ವೇಳೆಯೇ ಪ್ರಕಟಿಸುತ್ತೇನೆ. ಮುಖ್ಯಮಂತ್ರಿ ವಿಶ್ವಾಸ ಮತಯಾಚನೆ ಮಾಡುತ್ತಿರುವುದರಿಂದ ಸದನಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಅತೃಪ್ತ ಶಾಸಕರು ನಿಮ್ಮನ್ನೇ ತಮ್ಮ ನಾಯಕರು ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮೇಲಿನ ಗೌರವಕ್ಕೆ ಆ ರೀತಿ ಹೇಳಿರಬಹುದು. ಆದರೆ, ಅವರ್ಯಾರೂ ನನ್ನ ಸಂಪರ್ಕದಲ್ಲಿಲ್ಲ. ನಾನು ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos