ಕೊಳ್ಳೇಗಾಲ: ಮೈತ್ರಿ ಸರ್ಕಾರವನ್ನು ಬೆಂಬಲಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಶಾಸಕ ಎನ್ ಮಹೇಶ್ ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಗೈರು ಹಾಜರಾಗುವುದಾಗಿ ತಿಳಿಸಿದ್ದಾರೆ ಈ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದ್ದಾರೆ
ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಮಹೇಶ್ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಚಿವ ಸ್ಥಾನ ತೊರೆದ ನಂತರ ಮೈತ್ರಿ ಸರ್ಕಾರದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರಲಿಲ್ಲ.
ಆದರೆ ಸರ್ಕಾರ ಬಹುಮತ ಕಳೆದುಕೊಂಡಿರುವ ಸಂದರ್ಭದಲ್ಲಿಯೇ ಮೈತ್ರಿ ಸರ್ಕಾರದ ಮತ್ತೊಬ್ಬ ಶಾಸಕ ಎನ್ ಮಹೇಶ್ ವಿಶ್ವಾಸ ಮತ ಯಾಚನೆ ವೇಳೆ ಗೈರಾಗಲು ತೀರ್ಮಾನಿಸಿದ್ದಾರೆ. ಪಕ್ಷದ ಹೈ ಕಮಾಂಡ್ ನಿರ್ದೇಶನದ ಮೇರೆಗೆ ಎರಡು ದಿನಗಳು ಸದನದಕ್ಕೆ ಗೈರು ಹಾಜರಾಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ
ಮೈತ್ರಿ ಈಗ ಸರ್ಕಾರ ರಕ್ಷಣೆಗಾಗಿ ಪ್ರತಿಯೊಬ್ಬ ಶಾಸಕರನ್ನು ಕಾಡಿ ಬೇಡಿ ಉಳಿಸಿಕೊಳ್ಳುತ್ತಿರುವ ನಾಯಕರು ಬಿಎಸ್ಪಿ ವರಿಷ್ಠೆ ಮಾಯಾವತಿ ಅವರನ್ನು ಮರೆತಿರುವಂತೆ ಕಾಣುತ್ತಿದೆ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಇದುವರೆಗೂ ಮಾಯವತಿ ಜತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಾಗಲೀ, ಮಾಜಿ ಪ್ರಧಾನಿ ದೇವೇಗೌಡರಾಗಲಿ ಚರ್ಚೆ ನಡೆಸಿಲ್ಲ ಎನ್ನಲಾಗಿದೆ.
ರಾಷ್ಟ್ರೀಯ ಅಧ್ಯಕ್ಷರನ್ನು ಮೈತ್ರಿ ನಾಯಕರು ಕಡೆಗಣಿಸಿರುವ ಹಿನ್ನಲೆಯಲ್ಲಿ ಎನ್ ಮಹೇಶ್ ಸದನದಕ್ಕೆ ಗೈರಾಗುವ ಮೂಲಕ ಮೈತ್ರಿ ನಾಯಕರಿಗೆ ಆಘಾತ ಕೊಡಲು ಮುಂದಾಗಿದ್ದಾರೆ.
ಈ ಬಗ್ಗೆ ಕೊಳ್ಳೆಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎನ್ ಮಹೇಶ್, ಸೋಮವಾರ ಹಾಗೂ ಮಂಗಳವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಸದನದಕ್ಕೆ ಗೈರು ಹಾಜರಾಗುತ್ತಿದ್ದೇನೆ. ಪಕ್ಷದ ವರಿಷ್ಟರಿಂದ ಸಂದೇಶ ಬಂದಿರುವ ಹಿನ್ನಲೆಯಲ್ಲಿ ಸದನದ ಕಲಾಪಕ್ಕೆ ಹಾಜರಾಗುತ್ತಿಲ್ಲ ಎಂದು ಸ್ಪಷ್ಟಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos