ಬೆಂಗಳೂರು: ಅತೃಪ್ತರ ರಾಜಿನಾಮೆ ಬೆನ್ನಲ್ಲೇ ಸಿಎಂ ಎಚ್ ಡಿ ಕುಮಾರ ಸ್ವಾಮಿ ರಾಜಿನಾಮೆಗೆ ಆಗ್ರಹಿಸಿದ್ದ ಬಿಜೆಪಿ ನಾಯಕರು ಇದೀಗ ಪಕ್ಷಪಾತದ ಆರೋಪ ಹೊರಿಸಿ ಸ್ಪೀಕರ್ ರಮೇಶ್ ಕುಮಾರ್ ಅವರ ರಾಜಿನಾಮೆಗೂ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಪತನವಾದ ಹಿನ್ನಲೆಯಲ್ಲಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರು, ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಸದನದಲ್ಲಿ ತನ್ನ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಕಾರಣ, ಸ್ಪೀಕರ್ ಕೂಡ ತಮ್ಮ ಸ್ಥಾನದಿಂದ ನಿರ್ಗಮಿಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಸ್ಪೀಕರ್ ರಮೇಶ್ ಕುಮಾರ್ ಅವರ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೊನ್ನಾಳ್ಳಿ ಬಿಜೆಪಿ ಶಾಸಕ ಎಂ. ಪಿ ರೇಣಿಕಾಚಾರ್ಯ ಅವರು, 'ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ನಾವೆಲ್ಲ ಅವಿರೋಧವಾಗಿ ಆಯ್ಕೆ ಮಾಡಿದ್ದೆವು. ಆದರೆ ಅವರು ಅತೃಪ್ತ ಶಾಸಕರು ರಾಜೀನಾಮೆ ನೀಡಿದಾಗ ತಕ್ಷಣ ಅಂಗೀಕರಿಸದೆ ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ಅವರನ್ನು ಅನರ್ಹಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ ವಿಶ್ವಾಸಮತ ಕಲಾಪದ ವೇಳೆಯಲ್ಲೂ ಅವರು ಪಕ್ಷಪಾತಿಯಂತೆ ವರ್ತಿಸಿದ್ದಾರೆ. ಹೀಗಾಗಿ ರಮೇಶ್ ಕುಮಾರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಮುಂದಿನ ಸಭಾಧ್ಯಕ್ಷರ ಆಯ್ಕೆಯಲ್ಲಿ ಪಕ್ಷದ ತೀರ್ಮಾನವೇ ಅಂತಿಮ
ಇದೇ ವೇಳೆ ಮುಂದಿನ ಸಭಾಧ್ಯಕ್ಷರ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇಣುಕಾಚಾರ್ಯ ಅವರು, 'ಮುಂದಿನ ಸಭಾಧ್ಯಕ್ಷರು ಯಾರಾಗಬೇಕು ಎಂದು ನಮ್ಮ ಪಕ್ಷದ ವರಿಷ್ಟರು ತೀರ್ಮಾನ ಕೈಗೊಳ್ಳುತ್ತಾರೆ. ಈ ಕುರಿತಂತೆ ಶೀಘ್ರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಇನ್ನು ರೇಣುಕಾಚಾರ್ಯ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ಸಿಗರು, ರೇಣುಕಾಚಾರ್ಯ ಅವರು ಕೆಜಿ ಬೋಪ್ಪಯ್ಯ ಅವರ ಕಾರ್ಯ ವೈಖರಿಯನ್ನು ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos