ಬೆಂಗಳೂರು: ಕಳೆದ 14 ತಿಂಗಳ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಗಳ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನೇಕ ಟೀಕೆಗಳನ್ನು, ಸವಾಲುಗಳನ್ನು ಎದುರಿಸಿದ್ದರು. ಇದೀಗ ಮೈತ್ರಿ ಸರ್ಕಾರ ಪತನವಾಗಿದೆ.
ಆದರೆ ಪ್ರತಿಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರ ಪಾತ್ರ ವಿಧಾನಸಭೆಯಲ್ಲಿ ಮುಂದುವರಿಯಲಿದ್ದು, ಸಕ್ರಿಯ ರಾಜಕಾರಣದಿಂದ ಅವರು ಹಿಂದೆ ಸರಿಯುವ ಪರಿಸ್ಥಿತಿ ಸದ್ಯದ ಮಟ್ಟಿಗೆ ಬರುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಅವರಿಗೆ ಇನ್ನು ಸಂಪೂರ್ಣ ಹಿಡಿತ ಸಿಗುವ ಅವಕಾಶ ಹೆಚ್ಚಾಗಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೇ ಇದ್ದಾಗ ಅಂದಿನ ಪರಿಸ್ಥಿತಿಯ ಅನಿವಾರ್ಯತೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಯಿತು. ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನ ಹಿರಿಯ ನಾಯಕರಲ್ಲಿ ಸಿದ್ದರಾಮಯ್ಯ ಪ್ರಮುಖರು. ಇದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು ಕೂಡ.
ಇಂದು ಮೈತ್ರಿ ಸರ್ಕಾರ ಪತನವಾಗಿರುವುದು ಸಿದ್ದರಾಮಯ್ಯನವರಿಗೆ ಸಹ ದೊಡ್ಡ ನಷ್ಟ. ಅವರ ಬೆಂಬಲಿಗ ಶಾಸಕರಿಗೆ ಮಂತ್ರಿ ಮಾಡುತ್ತೇನೆಂದು ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇಂದು ಅತೃಪ್ತ ಶಾಸಕರಲ್ಲಿ ಅವರ ಅನುಯಾಯಿಗಳಿರುವುದರಿಂದ ರಾಜ್ಯದಲ್ಲಿ ಇಂದು ಉಂಟಾದ ರಾಜಕೀಯ ಬಿಕ್ಕಟ್ಟಿನಲ್ಲಿ ಸರ್ಕಾರ ಪತನವಾದದ್ದರಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ಹೈಕಮಾಂಡ್ ಗೆ ಮನದಟ್ಟು ಮಾಡುವುದು ಸಿದ್ದರಾಮಯ್ಯನವರಿಗೆ ಕಷ್ಟದ ಕೆಲಸವೇ.
ತಾವು ವಿವಾದರಹಿತ ಅಹಿಂದ ನಾಯಕ ಎಂದು ಮತ್ತೆ ಜನತೆಯ ಮನಸ್ಸಿನಲ್ಲಿ ಸ್ಥಾನ ಪಡೆದುಕೊಳ್ಳುವುದು ಸಹ ಸಿದ್ದರಾಮಯ್ಯನವರ ಮುಂದಿದೆ.
ಅತೃಪ್ತ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ, ಆಪರೇಶನ್ ಕಮಲಕ್ಕೆ ಬಲಿಯಾದ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರವೇ ಇಲ್ಲ. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಅವರನ್ನು ಅನರ್ಹಗೊಳಿಸುವುದರಿಂದ ನೂತನ ಸರ್ಕಾರದಲ್ಲಿ ಅವರಿಗೆ ಯಾವುದೇ ಸ್ಥಾನ ನೀಡಲು ಸಾಧ್ಯವಿಲ್ಲ, ಮಂತ್ರಿ ಮಾಡಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos