ರಾಜಕೀಯ

ಸುಳ್ಳು ಆರೋಪದ ವಿಷ ಕುಡಿದು ವಿಷಕಂಠನಾಗಿರುವೆ: ಅತೃಪ್ತ ಶಾಸಕರ ಹೇಳಿಕೆಗೆ ಸಿದ್ದರಾಮಯ್ಯ ಬೇಸರ

Raghavendra Adiga
ಬೆಂಗಳೂರು:  ಮುಖ್ಯಮಂತ್ರಿಯಾಗಿದ್ದಾಗ ಕೂಡಾ ತಮ್ಮ ಮೇಲೆ ಸುಳ್ಳು ಆರೋಪಗಳ ಸುರಿಮಳೆಯೇ ನಡೆದಿತ್ತು, ತಮ್ಮ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶಃ ಕೊನೆಯದೂ ಅಲ್ಲ, ಇಂತಹ ಸುಳ್ಳು ಆರೋಪಗಳ ವಿಷಕುಡಿದು, ಕುಡಿದು ತಾವು ಈಗ ವಿಷಕಂಠನಾಗಿರುವುದಾಗಿ, ಕೊನೆಗೆ ಸತ್ಯವೇ ಗೆಲ್ಲಲಿದೆ ಸತ್ಯಮೇವ ಜಯತೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
'ಸಿದ್ದರಾಮಯ್ಯನವರು ನಮ್ಮ‌‌ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ, ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ, ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಸಿದ್ಧರಾಮಯ್ಯ ಟ್ವೀಟ್ ನಲ್ಲಿ ಸವಾಲು ಹಾಕಿದ್ದಾರೆ.
SCROLL FOR NEXT