ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಮಾತೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದ ಎದ್ದಿದ್ದ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ತೆರೆ ಎಳೆದಿದ್ದು, ತಾವು ಯಾವುದೇ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಮಾತೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ’ ಎಂದು ಟ್ವೀಟ್ ಮಾಡಿದ್ದಾರೆ.