ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ 14 ಮಂದಿ ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಬಂಡಾಯ ಶಾಸಕರ ರಾಜೀನಾಮೆ ಬಗ್ಗೆ ಮೊದಲು ನಿರ್ಧಾರ ಕೈಗೊಳ್ಳುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಮೇಶ್ ಕುಮಾರ್ ಉಲ್ಲಂಘಿಸಿದ್ದಾರೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಂಡಾಯ ಶಾಸಕರು ಕೇಳಿದ್ದ ನಾಲ್ಕು ವಾರಗಳ ಕಾಲಾವಕಾಶವನ್ನು ಮಂಜೂರು ಮಾಡದೆ ಸ್ಪೀಕರ್ ಅನ್ಯಾಯ ಮಾಡಿದ್ದಾರೆ.ರಾಜೀನಾಮೆ ನೀಡಿರುವ ಶಾಸಕರೆಲ್ಲರೂ ಸುಪ್ರೀಂಕೋರ್ಟ್ ಗೆ ಹೋದರೆ , ಸ್ಪೀಕರ್ ನೀಡಿರುವ ಅನರ್ಹತೆ ಆದೇಶ ರದ್ದುಗೊಳ್ಳಲಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ.
ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಿರುವ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಶಾಸಕರಾದ ಎಚ್ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯ ನಾಳೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ಉಳಿದ ಅನರ್ಹಗೊಂಡಿರುವ ಕಾಂಗ್ರೆಸ್ ಶಾಸಕರು ಕೂಡಾ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos