ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷ ತೊರೆದು ಕಾಂಗ್ರೆಸ್ ಗೆ ಬಂದರೆ ಮುಖ್ಯಮಂತ್ರಿಯಾಗಲು ಸಹಕರಿಸುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈಗ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಯಡಿಯೂರಪ್ಪ ಅವರು ಬಿಜೆಪಿಯಲ್ಲಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇಟ್ಟುಕೊಂಡಿರುವುದು ತಪ್ಪಲ್ಲ. ಅದರ ಬಗ್ಗೆ ನನ್ನ ಆಕ್ಷೇಪಣೆಯೂ ಇಲ್ಲ. ಆದರೆ ಅವರು ಬಿಜೆಪಿಯನ್ನು ತೊರೆದು ಬಂದಲ್ಲಿ ಸಹಕರಿಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಒಂದು ವರ್ಷದಿಂದಲೂ ಬಿಜೆಪಿ ನಾಯಕರು ಪದೇ ಪದೇ ಸರ್ಕಾರ ಬಿದ್ದು ಹೋಗುತ್ತದೆ, ನಾವು ಪರ್ಯಾಯ ಸರ್ಕಾರ ಮಾಡುತ್ತೇವೆ ಎಂದು ಹೇಳಿಕೊಂಡು ಬರುತ್ತಲೇ ಇದ್ದಾರೆ. ರಾಜ್ಯದ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಯಡಿಯೂರಪ್ಪನವರು ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಆಸೆ ಇಟ್ಟುಕೊಳ್ಳುವುದು ಒಳ್ಳೆಯದಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.