ಬೆಂಗಳೂರು: ಇಬ್ಬರು ಪಕ್ಷೇತರ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದಿದ್ದು, ಖಂಡಿತ ಮತ್ತೆ ಸಂಪುಟ ಪುನರಚನೆಯಾಗಲಿದೆ ಮತ್ತು ಹಲವು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪಕ್ಷೇತರ ಶಾಸಕರಾದ ಆರ್ ಶಂಕರ್ ಮತ್ತು ಎಚ್ ನಾಗೇಶ್ ಅವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಸಚಿವ ಆಕಾಂಕ್ಷಿಗಳಾಗಿದ್ದ ಹಲವು ಹಿರಿಯ ಕಾಂಗ್ರೆಸ್ ನಾಯಕರು ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಿದ್ದರು.
ಈ ಕುರಿತು ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್ ಅವರು, ಇನ್ನು ಆರು ತಿಂಗಳಲ್ಲೇ ಸಂಪುಟ ಪುನರಚನೆಯಾಗಲಿದೆ. ಈ ವೇಳೆ ಹಲವು ಹಿರಿಯ ನಾಯಕರು ಸೇರಿದಂತೆ ಅವಕಾಶ ವಂಚಿತ ಶಾಸಕರಿಗೆ ಅವಕಾಶ ನೀಡಲಾಗುವುದು ಎಂದರು.
ಸಚಿವರ ಮೌಲ್ಯಮಾಪನ ನಡೆಸಿದ ಬಳಿಕ ಸಂಪುಟದಿಂದ ಯಾರನ್ನು ಕೈಬಿಡಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.