ರಾಜಕೀಯ

ಮೋದಿ ಹತ್ಯೆಗೆ ಕರೆ: ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ದೂರು

Lingaraj Badiger
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಬುಧವಾರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.
ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವಂತೆ ಗೋಪಾಲ ಕೃಷ್ಣ ಬೇಳೂರು ಹೇಳಿಕೆ ನೀಡಿದ್ದಾರೆ. ಬೇಳೂರು ಇಂತಹ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೂ ಸಹ ಅವರ ಮಾತಿನ ಮೇಲೆ ಕಾಂಗ್ರೆಸ್ ನಾಯಕರು ಕಡಿವಾಣ ಹಾಕಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲವಾಗಿದೆ ಎಂದು ಹೇಳುವವರು ಪ್ರಚೋದನಕಾರಿ ಹೇಳಿಕೆ ನೀಡಿದ ಬೇಳೂರು ಗೋಪಾಲಕೃಷ್ಣ ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದ ಪೊಲೀಸ್ ಇಲಾಖೆ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದು,  ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕಿದೆ ಎಂದರು.
ಲೋಕಸಭೆ ಚುನಾವಣೆ ಇರುವುದರಿಂದ ಪ್ರಧಾನಿ ಮೋದಿ ಆವರ ಜೀವಕ್ಕೆ ಅಪಾಯವಿದೆ. ಹೀಗಾಗಿ ಬೇಳೂರು ಗೋಪಾಲ ಕೃಷ್ಣ ಅವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ, ಗೂಂಡಾ ಕಾಯ್ದೆಯಡಿ ಬಂಧಿಸಿ, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು‌ ಎಂದು ನಾರಾಯಣಸ್ವಾಮಿ ಆಗ್ರಹಿಸಿದರು.
ರಾಜ್ಯ ಬಿಜೆಪಿ ಸಹ ವಕ್ತಾರ ಎಸ್.ಎಸ್.ಪ್ರಕಾಶ್, ಮಾಜಿ ಉಪ ಮೇಯರ್ ಎಸ್. ಹರೀಶ್, ಬಿಜೆಪಿ ಮುಖಂಡ  ಛಲವಾದಿ ನಾರಾಯಣ ಸ್ವಾಮಿ ,ನಗರ ಬಿಜೆಪಿ ಅಧ್ಯಕ್ಷ  ಪಿ.ಎನ್.ಸದಾಶಿವ ಬಿಜೆಪಿ ನಿಯೋಗದಲ್ಲಿದ್ದರು.
SCROLL FOR NEXT