ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಶೂಟ್ ಮಾಡಿ ಹೇಳಿಕೆಗೆ ಬೇಳೂರಿನ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಅವರು ಬಿಜೆಪಿಯಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ವಾಸ್ತವವಾಗಿ ಹೇಳಬೇಕೆಂದರೆ ಸ್ವತಃ ಕಾಂಗ್ರೆಸ್ ನಾಯಕರೇ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಯನ್ನು ಒಪ್ಪಿಕೊಂಡಿಲ್ಲ. ಶಾಸಕ ಗೋಪಾಲಕೃಷ್ಣ ಅವರನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿರುವ ಬಿಜೆಪಿ ಇಂದು ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.
ನಿನ್ನೆ ಬಿಜೆಪಿ ಕರ್ನಾಟಕ ಟ್ವಿಟ್ಟರ್ ಖಾತೆಯಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಉದ್ರೇಕಕಾರಿ ಹೇಳಿಕೆಯನ್ನೊಳಗೊಂಡ ಭಾಷಣದ ವಿಡಿಯೊವನ್ನು ಶೇರ್ ಮಾಡಿ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಪಕ್ಷದ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಬೇಳೂರು ಗೋಪಾಲಕೃಷ್ಣ ಅವರು ಪ್ರಧಾನಿ ಮೋದಿಯವರ ಹತ್ಯೆ ಮಾಡಿ ಎಂದು ಹೇಳಿದ್ದು ಅವರನ್ನು ತಕ್ಷಣವೇ ಬಂಧಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
ಗಾಂಧಿ ಪ್ರತಿಕೃತಿಯನ್ನು ದಹಿಸಿದ್ದಾರೆ ಎಂದು ಆರೋಪಿಸಿ ಅಖಿಲ ಭಾರತ ಹಿಂದೂ ಮಹಾಸಭಾ ಸದಸ್ಯರ ವಿರುದ್ಧ ಮೊನ್ನೆ 4ರಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಬೇಳೂರು ಗೋಪಾಲಕೃಷ್ಣ ಧೈರ್ಯವಿದ್ದರೆ ಮೋದಿಯವರನ್ನು ಶೂಟ್ ಮಾಡಿ ಎಂದು ಬಲಪಂಥೀಯ ಕಾರ್ಯಕರ್ತರನ್ನು ಕೆರಳಿಸುವಂತಹ ಹೇಳಿಕೆ ಕೊಟ್ಟಿದ್ದರು. ಈ ಹಿಂದೆ ಬಿಜೆಪಿಯಲ್ಲಿದ್ದ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶಾಸಕರಾಗಿದ್ದರು.
ಶಾಸಕರು ನೀಡಿರುವ ಈ ಹೇಳಿಕೆ ಆಘಾತಕಾರಿ. ಅವರನ್ನು ಕೂಡಲೇ ಬಂಧಿಸಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಹೇಳಿದ್ದಾರೆ. ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ನಾಯಕನಾಗಿರುವುದರಿಂದ ಸರ್ಕಾರ ಕಣ್ಣಿದ್ದು ಕುರುಡನಂತೆ ವರ್ತಿಸುತ್ತಿದೆ ಎಂದರು.
ಇನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ಗೋಪಾಲಕೃಷ್ಣ ಅವರ ಈ ಹೇಳಿಕೆಯನ್ನು ಒಪ್ಪುತ್ತಿಲ್ಲ. ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿ. ಅವರ ವಿರುದ್ಧ ಅಂತಹ ಹೇಳಿಕೆ ನೀಡುವುದು ಸರಿಯಲ್ಲ. ಮೋದಿಯವರ ಬಗ್ಗೆ ನಮಗೆ ತಾತ್ವಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos