ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ವತಿಯಿಂದ ಇಬ್ಬರು ಮಹಿಳಾಮಣಿಯರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿ ಗೋಚರಿಸುತ್ತಿದೆ.
ತಂತ್ರಕ್ಕೆ ಪ್ರತಿತಂತ್ರ ಎಂಬ ನೀತಿಯನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಅನುಸರಿಸಲು ಮುಂದಾಗಿವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಅನಂತ್ಕುಮಾರ್ ಅವರು ಆರು ಬಾರಿ ಪ್ರತಿನಿಧಿಸಿದ್ದರು. ಅವರ ಅಕಾಲಿಕ ನಿಧನದಿಂದ ಕ್ಷೇತ್ರ ತೆರವಾಗಿದ್ದು ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಬಿಜೆಪಿ ತೇಜಸ್ವಿನಿ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಕೂಡ ನಂದನ್ ನೀಲಖೇಣಿ ಪತ್ನಿ ರೋಹಿಣಿ ನೀಲಖೇಣಿ ಅವರನ್ನು ಕಣಕ್ಕಿಳಿಸಲು ಗಂಭೀರ ಚಿಂತನೆ ಮಾಡಿದೆ. ಈ ಸಂಬಂಧ ಈಗಾಗಲೇ ರೋಹಿಣಿ ನೀಲಖೇಣಿ ಅವರನ್ನು ಹಿರಿಯ ನಾಯಕರು ಸಂಪರ್ಕ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ . ಇಬ್ಬರು ಮಹಿಳಾಮಣಿಯರ ಜೊತೆಗೆ ಮಾಜಿ ಶಾಸಕ ಪ್ರಿಯಾಕೃಷ್ಣ ಹೆಸರೂ ಕೂಡ ಹರಿದಾಡುತ್ತಿದೆ.