ಬೆಂಗಳೂರು:ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಷ್ , ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ಉಮೇದುವಾರಿಕೆ ಸಲ್ಲಿಸುವುದಾಗಿ ತಿಳಿಸಿದರು.
ಅಂಬರೀಷ್ ತೀರಿಕೊಂಡಾಗ ಕತ್ತಲೆಯ ಮನಸ್ಥಿತಿಯಲ್ಲಿದೆ. ಜೀವನದಲ್ಲೇನಿದೆ ಎಂಬ ಭಾವನೆ ಕಾಡತೊಡಗಿತ್ತು.ಅಂತಹ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಂಬರೀಷ್ ಅಭಿಮಾನಿಗಳು ನನ್ನಲ್ಲಿ ಧೈರ್ಯ ತುಂಬಿದ್ದರು.ಅವರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕಾರಣ ಪ್ರಾರಂಭಿಸುತ್ತಿರುವುದಾಗಿ ತಿಳಿಸಿದರು.
ಚುನಾವಣೆ ಎದುರಿಸಲು ಸಾಕಷ್ಟು ಧೈರ್ಯ ಬೇಕು, ಈಗ ನಾನು ಆಯ್ಧುಕೊಳ್ಳುವ ದಾರಿ ಸುಲಭವಾಗಿಲ್ಲ. ನಾನು ರಾಜಕಾರಣಿ ಅಲ್ಲ, ನಾನು ಆಯ್ದುಕೊಳ್ಳುವ ದಾರಿಯಲ್ಲಿ ಅವಮಾನವಿದೆ .ಆದರೂ, ಮಂಡ್ಯದ ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಲು ಇಷ್ಟವಿಲ್ಲ. ಕೆಲವರಿಗೆ ಇದರಿಂದ ಅನೂಕೂಲವಾಗದಿರಬಹುದು ಅಂಬಿ ಮೇಲಿನ ಜನರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾವೂ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಕೃಷ್ಣ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಅವರೆಲ್ಲ ಬೆಂಬಲ ನೀಡುವ ಭರವಸೆ ಕೊಟ್ಟಿದ್ದಾರೆ. ಸೋಲು -ಗೆಲುವು ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.ಗೆದ್ದರೆ ಅದು ಮಂಡ್ಯ ಜನರ ಗೆಲುವೆ ಹೊರತು ನನ್ನ ವೈಯಕ್ತಿಕ ಗೆಲುವಲ್ಲ ಎಂದು ಸುಮಲತಾ ಸ್ಪಷ್ಟಪಡಿಸಿದ ಸುಮಲತಾ, ತಮಗೆ ಧೈರ್ಯ ತುಂಬಲು ಯಶ್, ದರ್ಶನ್, ರಾಕ್ ಲೈನ್ ವೆಂಕಟೇಶ್ ಮತ್ತಿತರ ಚಿತ್ರರಂಗದವರು ನೆರವು ಇರುವುದಾಗಿ ತಿಳಿಸಿದರು.
ಯಾರನ್ನೂ ನೋಯಿಸಲು ಈ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡುತ್ತೇನೆ. ಇದೇ 20ರಂದು ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಪ್ರಕಟಿಸಿದರು.
ಮಂಡ್ಯದಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಖಿಲ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದು, ಇದರಿಂದ ಮಂಡ್ಯ ಜಿಲ್ಲೆಯಲ್ಲಿ ಸುಮಲತಾ ಮತ್ತು ನಿಖಿಲ್ ನಡುವೆ ನೇರ ಹಣಾಹಣಿ ನಡೆಯುವುದು ನಿಶ್ಚಿತ ಎಂದು ಹೇಳಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos