ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಬೆಂಬಲಕ್ಕೆ ನಿಂತಿರುವ ಸ್ಯಾಂಡಲ್ ವುಡ್ ಸ್ಟಾರ್ ನಟರಾದ ದರ್ಶನ್ ಹಾಗೂ ಯಶ್ ಅವರ ಚಿತ್ರಗಳನ್ನು ಮತದಾನ ಮುಕ್ತಾಯದವರೆಗೂ ನಿಷೇಧ ಹೇರಬೇಕು ಎಂದು ಆಗ್ರಹಿಸಿ ದೂರು ದಾಖಲಿಸಲಾಗಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟಿ ಸುಮಲತಾ ಅಂಬರೀಷ್ ಅವರ ಸ್ಪರ್ಧೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಇಳಿದಿರುವ ಸ್ಯಾಂಡಲ್ವುಡ್ ನಟರ ವಿರುದ್ಧ ಜಯ ಕರ್ನಾಟಕ ಸಂಘಟನೆಯು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಚಿತ್ರನಟ ದರ್ಶನ್, ಯಶ್, ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಬಹಿರಂಗವಾಗಿ ಅಭ್ಯರ್ಥಿಯೊಬ್ಬರ ಒಬ್ಬರ ಪರ ಮತಯಾಚಿಸುತ್ತಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆ ಮುಗಿಯುವವರೆಗೂ ಇವರ ಚಲನಚಿತ್ರಗಳನ್ನು ನಿಷೇಧಿಸಬೇಕೆಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಯಾವುದೇ ಸ್ಟಾರ್ ನಟ ಅಥವಾ ಪ್ರಚಾರಕ ಚುನಾವಣೆಯ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅವರೆಲ್ಲರೂ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಬರುತ್ತಾರೆ. ಹೀಗಾಗಿ ಚಿತ್ರನಟರು ನಟಿಸಿರುವ ಚಿತ್ರಗಳನ್ನು ನಿಷೇಧಿಸಬೇಕೆಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಚಂದ್ರಪ್ಪ ಆಗ್ರಹಿಸಿದ್ದಾರೆ.