ಕಲಬುರಗಿ: ಬಿಜೆಪಿ ನಾಯಕರು ನಿರೀಕ್ಷಿಸಿದಂತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬದಲಾಗಿ ಬಿಜೆಪಿ ಶಾಸಕರೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರು ಸೋಮವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಲಿದ್ದು, ಮೇ 23ರ ಬಳಿಕ ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಪಕ್ಷಕ್ಕೆ ಬರಲಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಮೈತ್ರಿ ಸರ್ಕಾರ ಐದು ವರ್ಷ ಅವಧಿ ಪೂರ್ಣಗೊಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮೈತ್ರಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಸಣ್ಣಪುಟ್ಟ ಗೊಂದಲಗಳಿದ್ದರೆ ಮೈತ್ರಿ ನಾಯಕರು ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿದ್ದಾರೆ. ಮೇ 23ಕ್ಕೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಲಿದ್ದು, ಮೇ 23ರ ಬಳಿಕವೂ ಮೈತ್ರಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲಿದೆ. ಆದರೆ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಶಾಸಕನ ರಾಜೀನಾಮೆಯಿಂದಾಗಿ ಚಿಂಚೋಳಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಕುಂದಗೋಳದಲ್ಲಿ ಸಚಿವ ಸಿ.ಎಸ್.ಶಿವಳ್ಳಿ ನಿಧನದಿಂದ ಚುನಾವಣೆ ಅನಿವಾರ್ಯವಾಗಿದೆ. ಆದರೆ ಚಿಂಚೋಳಿಯಲ್ಲಿ ಚುನಾವಣೆ ಅನಿವಾರ್ಯ ಆಗಿರಲಿಲ್ಲ. ಉಮೇಶ್ ಜಾಧವ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಸ್ಥಾನಮಾನ ನೀಡಿದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ವೇಣುಗೋಪಾಲ್ ಕಿಡಿಕಾರಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos