ಬೆಂಗಳೂರು: ಗುರುವಾರದ ಆರಂಭಿಕ ಫಲಿತಾಂಶ ನೋಡುವಾಗ ಬಿಜೆಪಿ ನೇತೃತ್ವದ ಎನ್ ಡಿಎ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಿದ್ದು ಒಂದು ವರ್ಷ ಪೂರೈಕೆಯಾದ ಸಂದರ್ಭದಲ್ಲಿ ಮೈತ್ರಿ ಸರ್ಕಾರಕ್ಕೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ.
ರಾಜ್ಯದಲ್ಲಿ ಮತ್ತೆ ಭಾರತೀಯ ಜನತಾ ಪಾರ್ಟಿ ಸರ್ಕಾರ ರಚಿಸಬಹುದೇ ಎಂಬ ಚರ್ಚೆ ಹುಟ್ಟಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಅಸ್ಥಿತ್ವದ ಪ್ರಶ್ನೆ, ಹೇಗಾದರೂ ಮಾಡಿ ಸರ್ಕಾರವನ್ನು ಉಳಿಸುವ ಸವಾಲು ಇದೆ.
ಇದಕ್ಕಾಗಿ ಇತ್ತೀಚೆಗೆ ಸಿದ್ದರಾಮಯ್ಯ ವಿರುದ್ಧ ಅಪಸ್ವರ ಎತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎ ಎಚ್ ವಿಶ್ವನಾಥ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆಯಲು ಕೂಡ ಸಿಎಂ ಕುಮಾರಸ್ವಾಮಿ ತಯಾರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮಂಗಳವಾರ ಕಾಂಗ್ರೆಸ್ ನ ಹಿರಿಯ ನಾಯಕ ರೋಶನ್ ಬೇಗ್ ಅವರು ಬಹಿರಂಗವಾಗಿ ಕೆ ಸಿ ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಆರೋಪ ಮಾಡಿರುವುದು ಸಾಕಷ್ಟು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ಮಧ್ಯೆ ಮಾತುಕತೆಯಾಗಿದೆ.