ರಾಜಕೀಯ

ಹೊಸಕೋಟೆ, ಶಿವಾಜಿನಗರ, ಹುಣಸೂರು ಬಿಜೆಪಿಗೆ ದೊಡ್ಡ ಸವಾಲು: ಜೆಡಿಎಸ್ ಗೆ ರೋಷನ್ ಬೇಗ್!

Shilpa D

ಬೆಂಗಳೂರು: ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿಗೆ ಹುಣಸೂರು, ಶಿವಾಜಿನಗರ ಹಾಗೂ ಹೊಸಕೋಟೆ  ಬಹು ದೊಡ್ಡ ಸವಾಲಾಗಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವರ್ಚಸ್ಸು ಹಾಗೂ ಕಳೆದ ನಾಲ್ಕು ತಿಂಗಳಲ್ಲಿ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಚುನಾವಣೆ ಫಲಿತಾಂಶ ನಿರ್ಧರಿಸಲಿದೆ, 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿಯಿದೆ. 

ಕಾಂಗ್ರೆಸ್ ಮತ್ತು ಜೆಡಿಎಸ್ ಅನರ್ಹ ಶಾಸಕರು ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸಲಿದ್ದಾರೆ. ಸದ್ಯ ಈ ಶಾಸಕರ ಬೆಂಬಲ  ಪಡೆಯುವುದು ಅವರ ಮುಂದಿರುವ ದೊಡ್ಡ ಸವಾಲಾಗಿದೆ, ಬಿಜೆಪಿ ಸ್ಥಳೀಯ ಕಾರ್ಯಕರ್ತರು ಈ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಸೂಚಿಸಿದೆ.

15 ಕ್ಷೇತ್ರಗಳಲ್ಲಿ ಸುಮಾರು 12ರಲ್ಲಿ ಗೆಲ್ಲಲು ನಾವು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಜನಪರ ಕೆಲಸಗಳನ್ನು ಮಾಡಿದೆ, ಹೀಗಾಗಿ ಜನರಿಗೆ ಬಿಜೆಪಿ ಮೇಲೆ ವಿಶ್ವಾಸ ಮೂಡಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್  ತಿಳಿಸಿದ್ದಾರೆ, 

ಉಳಿದ 12 ಕ್ಷೇತ್ರಗಳಿಗೆ ಹೋಲಿಸಿದರೇ ಹೋಸಕೋಟೆ, ಹುಣಸೂರು ಹಾಗೂ ಶಿವಾಜಿನಗರ ಕ್ಷೇತ್ರಗಳು ಬಿಜೆಪಿಗೆ ಕಬ್ಬಿಣದ ಕಡಲೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಗೆ ಜೆಡಿಎಸ್ ಬೆಂಬಲ ನೀಡಿದೆ, ಇನ್ನೂ ಜೆಡಿಎಸ್ ಭದ್ರಕೋಟೆಯಾಗಿರುವ ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಮತ್ತೆ ಮರು ಆಯ್ಕೆಯಾಗುವುದು ಸುಲಭದ ಮಾತಲ್ಲ.ಏನಾದರೂ ಆಗಬಹುದು, ಆದರೆ ನಾವು ಸುಲಭವಾಗಿ ಶಿವಾಜಿನಗರ ಬಿಟ್ಟುಕೊಡುವುದಿಲ್ಲ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಇನ್ನೂ ರೋಷನ್ ಬೇಗ್ ಅವರಿಗೆ ಬಿಜೆಪಿಯಲ್ಲಿ ಸ್ಥಾನವಿಲ್ಲದ ಕಾರಣ ಅವರು ಜೆಡಿಎಸ್ ನಿಂದ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ಈಗಾಗಲೇ ಜೆಡಿಎಸ್ ತನ್ವೀರ್ ಅಹ್ಮದ್  ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ, ರೋಷನ್ ಬೇಗ್ ಮಾಜಿ ಪ್ರಧಾನಿ ದೇವೇಗೌಡರ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದಾರೇ ಎಂದು ಕೇಳಿ ಬರುತ್ತಿವೆ.
 

SCROLL FOR NEXT