ಮಂಗಳೂರು: ಹಾಲಿ ಕರ್ನಾಟಕ ಉಪ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 5ರಂದು ನಡೆಯುವ ಕರ್ನಾಟಕ ಉಪ ಚುನಾವಣೆಗೆ ಬಿಜೆಪಿ ಶೀಘ್ರದಲ್ಲೇ 15 ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಅನರ್ಹ ಶಾಸಕರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವರೆಗೂ ಅನರ್ಹ ಶಾಸಕರು ಬಿಜೆಪಿಯ ಸದಸ್ಯತ್ವಕ್ಕಾಗಿ ಸಂಪರ್ಕಿಸಿಲ್ಲ. ಹೀಗಾಗಿ ಅವರಿಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷದ ಸದಸ್ಯರಲ್ಲದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದಾಗಲೇ ಸ್ಥಳೀಯ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ನಮ್ಮ ಚುನಾವಣಾ ಸಮಿತಿ ಪರಿಶೀಲನೆ ನಡೆಸಿ ಗೆಲ್ಲುವ ಅಭ್ಯರ್ಥಿಯನ್ನು ಶೀಘ್ರ ಆಯ್ಕೆ ಮಾಡಲಿದೆ ಎಂದು ಹೇಳಿದರು.
ಇನ್ನು ಬಿಜೆಪಿ ರಾಜ್ಯ ಉಸ್ತುವಾರಿ ವಿ.ಮುರಳೀಧರ ರಾವ್ ಅವರ ಈ ಹೇಳಿಕೆ ಇದೀಗ ಅನರ್ಹ ಶಾಸಕರ ಆತಂಕವನ್ನು ಹೆಚ್ಚಿಸಿದೆ.