ರಾಜಕೀಯ

ಬೆಂಗಳೂರು ಗಲಭೆ: ನ್ಯಾಯಾಂಗ ತನಿಖೆಗೆ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಆಗ್ರಹ

Manjula VN

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಮಾಜಿ ಪ್ರಧಾನಮಂತ್ರಿ ದೇವೇಗೌಡ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಆಗ್ರಹಿಸಿದ್ದಾರೆ. 

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ರಾಜಕೀ ನಾಯಕರು ಆರೋಪಗಳನ್ನು ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ ಎಸ್'ಡಿಪಿಐ ನಿಷೇಧಿಸಬೇಕೆಂದು ಹೇಳಿದ್ದಾರೆ. 

ಇದರಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಪ್ರಕರಣಗಲ್ಲಿ ನ್ಯಾಯಯುತ ತನಿಖೆ ನಡೆಯಬೇಕಾದರೆ, ನ್ಯಾಯ ದೊರಕಬೇಕಿದ್ದರೆ ನ್ಯಾಯಾಂಗ ತನಿಖೆ ನಡೆಸುವುದು ಉತ್ತಮವಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಯ ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುವುದು ಕಷ್ಟಸಾಧ್ಯ. ಹೀಗಾಗಿ ಪಕ್ಷದ ರಾಜಕೀಯಗಳನ್ನು ಬದಿಗೊತ್ತಿ, ದಾಳಿಗೊಳಗಾದ ಶಾಸಕನಿಗೆ ರಕ್ಷಣೆ ನೀಡಬೇಕು. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. 

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದ ಎಸ್'ಡಿಪಿಐ
ಘಟನೆಯ ಪ್ರಮುಖ ಜವಾಬ್ದಾರಿ ಎಂಬ ಆರೋಪ ಹೊತ್ತಿರುವ ಎಸ್'ಡಿಪಿಐ, ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ  ತನಿಖೆಯ ಅಗತ್ಯವಿದೆ ಎಂದು ಒತ್ತಾಯಿಸಿದೆ. 

ಮಾಧ್ಯಮಗಳೊಂದಿಗೆ ಮಾತನಾಡಿರುವ ಎಸ್'ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ, ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ನ್ಯಾಯಾಲಯವೇ ಮೇಲ್ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. 

ನಿಷ್ಪಕ್ಷಪಾತ ನ್ಯಾಯಾಂಗ ತನಿಖೆಯಾಗಬೇಕು. ಬಂಧನಕ್ಕೊಳಗಾಗಿರುವ ನವೀನ್ ಬಿಜೆಪಿ ನಾಯಕರೊಂದಿಗೆ ನಂಟು ಹೊಂದಿದ್ದಾರೆ. ಮುಸ್ಲಿಮರು ಮತ್ತು ದಲಿತರ ನಡುವೆ ಬಿರುಕು ಮೂಡಿಸಲು ವೋಟ್ ಬ್ಯಾಂಕ್ ಗಾಗಿ ಗಲಭೆ ಸೃಷ್ಟಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸಂಚು ರೂಪಿಸಿದ್ದವು ಎಂದು ಆರೋಪಿಸಿದ್ದಾರೆ. 

SCROLL FOR NEXT