ರಾಜಕೀಯ

ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಪಕ್ಷದ ಗುರುತು, ಪ್ರಮುಖ ನಾಯಕರ ಫೋಟೋ ಬಳಕೆ: ಅಭ್ಯರ್ಥಿಗಳಿಗೆ ಸಂಕಷ್ಟ

Sumana Upadhyaya

ಬೆಂಗಳೂರು: ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಫೋಟೋಗಳನ್ನು ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆಗಳನ್ನು ತಂದೊಡ್ಡಿದೆ.

ರಾಜ್ಯ ಚುನಾವಣಾ ಆಯೋಗ ಈ ಸಂಬಂಧ ಹಲವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ಅಧಿಕಾರಿಗಳು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ರಾಜ್ಯಾದ್ಯಂತ ಹಲವು ಅಭ್ಯರ್ಥಿಗಳ ವಿರುದ್ಧ ಕೇಸು ದಾಖಲಾಗಿದೆ. ಪಕ್ಷದ ಗುರುತಿನ ಆಧಾರದ ಮೇಲೆ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲದ ಕಾರಣ ಇದು ಗಂಭೀರವಾದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವಾಗಿದೆ. ತಪ್ಪಿತಸ್ಫರು ಎನಿಸಿದರೆ ಅನರ್ಹತೆಯನ್ನು ಸಹ ಎದುರಿಸಬೇಕಾಗಬಹುದು ಎನ್ನುತ್ತಾರೆ ಚುನಾವಣಾಧಿಕಾರಿಗಳು. ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ಡಿಸೆಂಬರ್ 22ರಂದು ನಡೆದಿದ್ದರೆ ಎರಡನೇ ಹಂತದ ಚುನಾವಣೆ ನಾಳೆ ನಡೆಯಲಿದೆ.

ರಾಜ್ಯ ಚುನಾವಣಾ ಆಯೋಗ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಲ್ಲಿ ಸುಮಾರು 40 ಕೇಸುಗಳನ್ನು ಮತ್ತು ಅಬಕಾರಿ ಕಾಯ್ದೆಯಡಿ 477 ಕೇಸುಗಳನ್ನು ದಾಖಲಿಸಲಾಗಿದೆ. ಅಭ್ಯರ್ಥಿಗಳು ಎಲ್ಲಾ ಪಕ್ಷಗಳೊಂದಿಗೆ ಗುರುತಿಸಿಕೊಂಡಂತೆ ಕಂಡುಬರುತ್ತಿದೆ. ತಮ್ಮ ಗೆಲುವಿಗಾಗಿ ಮತದಾರರನ್ನು ಸೆಳೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರುಗಳು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರುಗಳ ಫೋಟೋಗಳನ್ನು ಹಾಕಿಸಿಕೊಂಡಿದ್ದಾರೆ ಎಂದು ದೂರಲಾಗಿದೆ.

ಕೊಡಗು, ಯಾದಗಿರಿ, ರಾಮನಗರ, ಕಲಬುರಗಿ, ಹಾವೇರಿ ಮತ್ತು ಇತರ ಜಿಲ್ಲೆಗಳ ಅಭ್ಯರ್ಥಿಗಳು ತಮ್ಮ ಕರಪತ್ರಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳಲ್ಲಿ ಫೋಟೋ ಮತ್ತು ಚಿಹ್ನೆಗಳನ್ನು ಬಳಸಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ತಮ್ಮನ್ನು ಗುರುತಿಸಿಕೊಳ್ಳುವ ಫೇಸ್‌ಬುಕ್ ಅಥವಾ ವಾಟ್ಸಾಪ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಅಭ್ಯರ್ಥಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿದುಬಂದಿದೆ.

SCROLL FOR NEXT