ರಾಜಕೀಯ

ಗ್ರಾಮ ಪಂಚಾಯಿತಿ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

Manjula VN

ಬೆಂಗಳೂರು:  ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. 

ಎರಡು ಹಂತಗಳಲ್ಲಿ 226 ತಾಲೂಕುಗಳ 5,728 ಗ್ರಾಮ ಪಂಚಾಯಿತಿಗಳ 72,000 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಶೇ.80ಕ್ಕೂ ಹೆಚ್ಚು ಮತದಾನವಾಗಿತ್ತು. 2,22,814 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈಗಾಗಲೇ 8074 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಮತ ಎಣಿಕೆ ಕಾರ್ಯ ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಸಂಜೆಯ ವೇಳೆಗೆ ಫಲಿತಾಂಶ ಲಭ್ಯವಾಗುವ ನಿರೀಕ್ಷೆ ಇದೆ. 

ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಬಳಕೆ ಮಾಡಲಾಗಿದ್ದು, ಉಳಿದ ಜಿಲ್ಲೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗಿದೆ.  ಆಯಾ ತಾಲೂಕುಗಳಲ್ಲಿ ನಿಗದಿಪಡಿಸಿರುವ ಮತ ಎಣಿಕೆ ಕೇಂದ್ರದಲ್ಲಿ ಎಣಿಕೆ ಜರುಗಲಿದೆ. ಮತಪತ್ರಗಳ ಮೂಲಕ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿವರಗೆ ಮತ ಎಣಿಕೆ ನಡೆಯುವ ಸಾಧ್ಯತೆಗಳಿವೆ. 

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಂಜಿನಿಯರ್ ಗಳು, ಉನ್ನತ ಶಿಕ್ಷಣ ಪಡೆದ ಪದವೀಧರರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 

ಇದು ಪಕ್ಷಾತೀತ ಚುನಾವಣೆ ಆಗಿದ್ದರೂ ಆಯಾ ಪಕ್ಷಗಳು ಅಭ್ಯರ್ಥಿಗಳನ್ನು ಬೆಂಬಲಿಸಿ ಗ್ರಾಮ ಮಟ್ಟದಲ್ಲಿ ತಮ್ಮ ಬೇರು ಬಿಗಿಮಾಡಿಕೊಳ್ಳಲು ಯತ್ನಿಸುತ್ತಿವೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗ ಈ ಚುನಾವಣೆ ಫಲಿತಾಂಶ ಅತ್ಯಂತ ಮಹತ್ವದ್ದಾಗಿದೆ. 

ಈ ನಡುವೆ ಚುನಾವಣಾ ಫಲಿತಾಂಶ ಹಿನ್ನಲೆಯಲ್ಲಿ ಮಂಡ್ಯ, ಮದ್ದೂರು, ಚೆನ್ನರಾಯನಪಟ್ಟಣ ಮತ್ತು ರಾಮನಗರಕ್ಕೆ ಭೇಟಿ ನೀಡಿದ ರಾಜ್ಯ ಚುನಾವಣಾ ಆಯುಕ್ತ ಡಾ.ಬಸವರಾಜ್ ಅವರು, ಸುರಕ್ಷತಾ ಕ್ರಮ, ಭದ್ರತಾ ಕ್ರಮಗಳ ಕುರಿತು ಸಂತೃಪ್ತಿ ಹಾಗೂ ಸಂತಸ ವ್ಯಕ್ತಪಡಿಸಿದ್ದಾರೆ. 

ಪ್ರತೀ ತಾಲೂಕಿನ ಪ್ರಧಾನ ಕಚೇರಿಗಳಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಪ್ರತೀ ಜಿಲ್ಲೆಯಲ್ಲು ಉಪ ಆಯುಕ್ತ, ಜಿಲ್ಲಾ ಆಡಳಿತ ಮಂಡಳಿ ಅಧಿಕಾರಿಗಳು ಮತ ಎಣಿಕೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆಂದು ತಿಳಿಸಿದ್ದಾರೆ. 

SCROLL FOR NEXT