ಬೆಂಗಳೂರು: ಕಾಂಗ್ರೆಸ್ ನಾಯಕರು ತುಕ್ಡೇ ತುಕ್ಡೇ ಗ್ಯಾಂಗ್'ಗೆ ಬೆಂಬಲ ನೀಡುತ್ತಿದ್ದಾರೆ. ನನ್ನ ಬಳಿ ಈ ಬಗ್ಗೆ ದಾಖಲೆಗಳಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದ ಆರೋಪದಿಂದ ವಿಧಾನಸಬೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ನಿಮಗೆ ತಾಕತ್ತಿದ್ದರೆ, ತುಕ್ಡೇ ಗ್ಯಾಂಬ್ ಬಂಧಿಸಿ ಎಂದು ಈ ವೇಳೆ ಕಾಂಗ್ರೆಸ್ ಸದಸ್ಯರು ಗೃಹ ಸಚಿವರಿಗೆ ಸವಾಲು ಹಾಕಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಚರ್ಚೆ ವೇಳೆ ಮಧ್ಯಪ್ರವೇಶ ಮಾಡಿದ ಬೊಮ್ಮಾಯಿ, ಕಾಂಗ್ರೆಸ್ ನವರು ತುಕ್ಡೇ ಗ್ಯಾಂಗ್ ಪರ ನಿಂತಿದ್ದಾರೆ. ಸಿಎಎ ವಿರೋಧಿಸುವ ಮೂಲಕ ಪಾಕಿಸ್ತಾನ ಅಲ್ಪಸಂಖ್ಯಾತರಿಗೆ ನೆರವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಗೃಹ ಸಚಿವರಾಗಿ ಗಂಭೀರವಾಗಿ ಮಾತನಾಡುವುದನ್ನು ಕಲಿಯಿರಿ. ನಿಮ್ಮ ಬಳಿ ದಾಖಲೆಗಳಿದ್ದರೆ ತುಕ್ಡೇ ಗ್ಯಾಂಗ್ ಯಾವುದು ಹಾಗೂ ಅದರ ಅಧ್ಯಕ್ಷ ಯಾರು ಎಂಬುದನ್ನು ಬಹಿರಂಗಪಡಿಸಿ. ತಾಕತ್ತಿದ್ದರೆ ಅವರನ್ನು ಬಂಧಿಸಿ ಎಂದು ಸವಾಲು ಹಾಕಿದರು.